ADVERTISEMENT

‘ಆತ್ಮಸಾಕ್ಷಿಗೆ ಮತ ಹಾಕಿ’: ಯಡಿಯೂರಪ್ಪ ವಿನಂತಿ

​ಪ್ರಜಾವಾಣಿ ವಾರ್ತೆ
Published 17 ಮೇ 2018, 19:30 IST
Last Updated 17 ಮೇ 2018, 19:30 IST
‘ಆತ್ಮಸಾಕ್ಷಿಗೆ ಮತ ಹಾಕಿ’: ಯಡಿಯೂರಪ್ಪ ವಿನಂತಿ
‘ಆತ್ಮಸಾಕ್ಷಿಗೆ ಮತ ಹಾಕಿ’: ಯಡಿಯೂರಪ್ಪ ವಿನಂತಿ   

ಬೆಂಗಳೂರು: ‘ಜನಾದೇಶ ಪಡೆದಿರುವ ಬಿಜೆಪಿ ಸರ್ಕಾರ ರಚಿಸಬೇಕು ಎಂಬುದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಬಹಳಷ್ಟು ಶಾಸಕರ ಮನಸ್ಸಿನಲ್ಲಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಕೊಡಬೇಕು ಎಂದು ಅವರಲ್ಲಿ ವಿನಂತಿ ಮಾಡುತ್ತೇನೆ’ ಎಂದು ಯಡಿಯೂರಪ್ಪ ವಿನಂತಿಸಿದರು.

ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘60ರ ದಶಕದಲ್ಲಿ ಬಹುಮತ ಸಾಬೀತುಪಡಿಸುವ ವೇಳೆಯಲ್ಲಿ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಇಂದಿರಾ ಗಾಂಧಿ ಕೋರಿಕೊಂಡಿದ್ದರು. ಅದರಲ್ಲಿ ಯಶಸ್ಸು ಗಳಿಸಿದ್ದರು. 221 ಶಾಸಕರು ಆತ್ಮ ಸಾಕ್ಷಿ ಪ್ರಕಾರ ಮತ ಚಲಾಯಿಸುವ ವಿಶ್ವಾಸವಿದೆ’ ಎಂದರು.

‘ಬಹುಮತ ಸಾಬೀತುಪಡಿಸಲು ರಾಜ್ಯಪಾಲರು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಹೆಚ್ಚು ಸಮಯ ವ್ಯರ್ಥ ಮಾಡುವುದಿಲ್ಲ. ಆದಷ್ಟು ಶೀಘ್ರದಲ್ಲಿ ಅಧಿವೇಶನ ಕರೆದು ಬಹುಮತ ಸಾಬೀತುಪಡಿಸುತ್ತೇನೆ. ಆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ. ಪ್ರಮಾಣವಚನಕ್ಕೆ 3–4 ಲಕ್ಷ ಜನರನ್ನು ಸೇರಿಸುತ್ತೇನೆ. ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸುತ್ತೇನೆ’ ಎಂದರು.

ADVERTISEMENT

ರಾಜ್ಯದ ಆರೂವರೆ ಕೋಟಿ ಜನರಿಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಮೇಲಿಟ್ಟ ಪ್ರೀತಿ ನಂಬಿಕೆ ಕಾರಣಕ್ಕೆ ಮೂರನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ರೈತರು, ದಲಿತರು ಹಾಗೂ ಹಿಂದುಳಿದವರಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.