ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಯೇ ಇಲ್ಲ ಎಂದ ಕೆ.ಎಸ್.ಈಶ್ವರಪ್ಪ ಅವರು ಇಲ್ಲಿಯೇ ಠಿಕಾಣಿ ಹೂಡಿದ್ದು ಏಕೆ? ಎಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನಕುಮಾರ್ ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ತಮಗೆ ಪ್ರತಿಸ್ಪರ್ಧಿಯೇ ಇಲ್ಲ ಎಂದಿದ್ದ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಸೋಲುವ ಭೀತಿಯಿಂದಲೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹಾಗೂ ಕೇಂದ್ರ ಮತ್ತು ರಾಜ್ಯ ನಾಯಕರನ್ನು ಶಿವಮೊಗ್ಗಕ್ಕೆ ಕರೆಸಿ ತಮ್ಮ ಪರವಾಗಿ ಪ್ರಚಾರ ನಡೆಸಿದ್ದಾರೆ. ಈಶ್ವರಪ್ಪ ಸಹ ಕ್ಷೇತ್ರ ಬಿಟ್ಟು ಹೋಗದೇ ಇಲ್ಲಿಯೇ ಠಿಕಾಣಿ ಹೂಡಿದ್ದರು. ಸುಸ್ಕೃಂತರ ನಾಡಲ್ಲಿ ಮತದಾನದ ಹಿಂದಿನ ಎರಡು ದಿನಗಳು ನಡೆಸಬಾರದ ಚಟುವಟಿಕೆಗಳನ್ನು ನಡೆಸಿದ್ದಾರೆ. ಇವರಿಗೆ ಪ್ರತಿಸ್ಪರ್ಧಿ ಇಲ್ಲ ಎಂದಮೇಲೆ ಇಷ್ಟೆಲ್ಲಾ ಕಾರ್ಯಗಳನ್ನು ಮಾಡುವ ಪ್ರಮೇಯ ಏನಿತ್ತು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ತಮ್ಮ ಪಕ್ಷದ ಸಿದ್ಧಾಂತ ಹಾಗೂ ಶಾಸಕನಾಗಿ ನಡೆಸಿದ ಅಭಿವೃದ್ಧಿ ಕಾರ್ಯಗಳು ತಮ್ಮ ಕೈ ಹಿಡಿಯಲಿದ್ದು, ಈ ಬಾರಿ ಹತ್ತು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. ಶಿವಮೊಗ್ಗದಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಿರಬಹುದು. ಆದರೆ, ತಮ್ಮ ನಿರೀಕ್ಷೆಯ ಮತಗಳು ಬಿದ್ದಿವೆ. ಕ್ಷೇತ್ರದ ಜನ ಮತ್ತೊಮ್ಮೆ ಕೈ ಹಿಡಿದಿರುವ ನಿರೀಕ್ಷೆಯಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.