ಹೊಸಪೇಟೆ: ಕಂಪ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಜೆ.ಎನ್. ಗಣೇಶ ಗೆಲುವು ಸಾಧಿಸಿದ್ದಾರೆ. ಜೆ.ಎನ್.ಗಣೇಶ ಅವರಿಗೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಕ್ಷೇತ್ರದ ಹಾಲಿ ಶಾಸಕ ಟಿ.ಎಚ್. ಸುರೇಶಬಾಬು ಅವರಿಗೆ ತೀವ್ರ ಪೈಪೋಟಿ ನೀಡಿದ್ದರು. ಈ ಸಲ ಕಾಂಗ್ರೆಸ್ ಅವರನ್ನು ಕಣಕ್ಕಿಳಿಸಿತ್ತು. ಅಂತಿಮವಾಗಿ ಅವರು ಗೆಲುವು ಸಾಧಿಸಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಸೋತಿದ್ದ ಅವರ ಪರ ಕ್ಷೇತ್ರದಲ್ಲಿ ಅನುಕಂಪ ಇತ್ತು. ಗಣೇಶ ಅವರ ಗೆಲುವಿಗಾಗಿ ಕಾಂಗ್ರೆಸ್ ಹಿರಿಯ ಮುಖಂಡ ನಾರಾ ಸೂರ್ಯನಾರಾಯಣ ರೆಡ್ಡಿ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದರು.
2008ರಲ್ಲಿ ಬಿಜೆಪಿ, 2013ರಲ್ಲಿ ಬಿ.ಎಸ್.ಆರ್. ಕಾಂಗ್ರೆಸ್ನಿಂದ ಗೆದ್ದಿದ್ದ ಟಿ.ಎಚ್. ಸುರೇಶಬಾಬು ಈ ಸಲದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಚುನಾವಣೆಗೂ ಮುನ್ನ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅಂತಿಮವಾಗಿ ಬಿಜೆಪಿ ಹುರಿಯಾಳು ಆಗಿ ಕಣಕ್ಕಿಳಿದಿದ್ದರು. ಎರಡು ಅವಧಿಗೆ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಜತೆಗೆ ಜನರೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬಂದಿದ್ದವು. ಅಂತಿಮವಾಗಿ ಜನ ಬದಲಾವಣೆ ಬಯಸಿ, ಗಣೇಶ ಅವರನ್ನು ಆಯ್ಕೆ ಮಾಡಿದ್ದಾರೆ.
ಗೆಲುವಿಗೆ ಕಾರಣವಾದ ಐದು ಅಂಶಗಳು
* ಬದಲಾವಣೆ ಬಯಸಿದ ಕ್ಷೇತ್ರದ ಜನ
* ಹಿಂದಿನ ಅವಧಿಯಲ್ಲಿ ಅಭಿವೃದ್ಧಿಗೆ ಹಿನ್ನಡೆ
* ಜೆ.ಎನ್.ಗಣೇಶಗೆ ಅನುಕಂಪದ ಗೆಲುವು
* ಗಣೇಶಗೆ ಸೂರ್ಯನಾರಾಯಣ ರೆಡ್ಡಿ ಬಲ
* ಸುರೇಶಬಾಬು ಕ್ಷೇತ್ರದಿಂದ ದೂರ ಉಳಿದದ್ದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.