ಬೆಂಗಳೂರು: ‘ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡಿದ್ದೆ. ಈಗಲೂ ನಾನು ಆ ಮಾತಿಗೆ ಬದ್ಧಳಾಗಿದ್ದೇನೆ’ ಎಂದು ಮಾತೆ ಮಹಾದೇವಿ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಏಪ್ರಿಲ್ 7ರಂದು ನಡೆದಿದ್ದ ಮಠಾಧೀಶರ ಸಭೆಯಲ್ಲಿ ಈ ರೀತಿ ಹೇಳಿದ್ದೆ. ಜೊತೆಗೆ, ಸಿದ್ದರಾಮಯ್ಯ ಅವರನ್ನು ಬೆಂಬಲಿಸುವಂತೆ ಇತರ ಮಠಾಧೀಶರಿಗೂ ಕರೆ ನೀಡಿದ್ದೆ. ಈ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಮಹಾಸಭಾಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವರದೇ ಆದ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಅವರದ್ದು ಹಾಸ್ಯಾಸ್ಪದ ಹೇಳಿಕೆ. ರಾಜೀನಾಮೆ ಕೊಟ್ಟರೆ ಅವರಿಗೇ ನಷ್ಟ. ನನ್ನ ಹೇಳಿಕೆ ಬದಲಿಸಲು ಸಾಧ್ಯವಿಲ್ಲ’ ಎಂದರು.
‘ಲಿಂಗಾಯತ ಪ್ರತ್ಯೇಕ ಧರ್ಮದ ಕೂಗನ್ನು ಕಾಂಗ್ರೆಸ್ ಆಲಿಸಿತು. ಲಿಂಗಾಯತರಾಗಿದ್ದರೂ ಯಡಿಯೂರಪ್ಪ ಒಳ್ಳೆಯ ಕೆಲಸಗಳನ್ನು ಮಾಡಿಲ್ಲ. ಜೆಡಿಎಸ್ ಕೂಡ ಕುಟುಂಬ ರಾಜಕಾರಣದಿಂದ ಹೊರಗೆ ಬಂದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.