ADVERTISEMENT

ಚಂದ್ರಶೇಖರನಾಥ ಸ್ವಾಮೀಜಿ ಕಣಕ್ಕೆ?

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 19:30 IST
Last Updated 21 ಏಪ್ರಿಲ್ 2018, 19:30 IST

ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಪೀಠದ ಚಂದ್ರಶೇಖರನಾಥ ಸ್ವಾಮೀಜಿ ಅವರು ಬೊಮ್ಮನಹಳ್ಳಿ ಕ್ಷೇತ್ರದಿಂದ ಜೆಡಿಎಸ್‌ ಹುರಿಯಾಳಾಗುವ ಸಾಧ್ಯತೆಗಳು ದಟ್ಟವಾಗಿವೆ.

‘ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಮಠಕ್ಕೆ ಭಾನುವಾರ ತೆರಳಿ ಸ್ವಾಮೀಜಿ ಅವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಸ್ವಾಮೀಜಿ ತಮ್ಮ ನಿಲುವು ಪ್ರಕಟಿಸಲಿದ್ದಾರೆ’ ಎಂದು ಪಕ್ಷದ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ರಾಜ್ಯಸಭೆ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹಾಗೂ ಬೆಂಗಳೂರು ನಗರ ಘಟಕದ ಜೆಡಿಎಸ್ ಅಧ್ಯಕ್ಷ ಆರ್‌.ಪ್ರಕಾಶ್ ಅವರು ಶನಿವಾರ ಬೆಳಿಗ್ಗೆ ಮಠಕ್ಕೆ ತೆರಳಿ, ಚುನಾವಣೆಗೆ ಸ್ಪರ್ಧಿಸುವಂತೆ ಸ್ವಾಮೀಜಿ ಅವರಿಗೆ ಮನವಿ ಮಾಡಿದ್ದಾರೆ. ಅದಕ್ಕೆ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ 2013ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ, ಬಿಜೆಪಿಯ ಸತೀಶ್‌ ರೆಡ್ಡಿ ವಿರುದ್ಧ ಪರಾಭವ ಗೊಂಡಿದ್ದರು. ಆ ಸೋಲಿನ ಸೇಡು ತೀರಿಸಿಕೊಳ್ಳಲು ಸ್ವಾಮೀಜಿಯನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ.

ಈ ಕ್ಷೇತ್ರದಿಂದ ಎರಡು ಬಾರಿ ಗೆಲುವು ಸಾಧಿಸಿರುವ ಸತೀಶ್‌ ರೆಡ್ಡಿ, ಹ್ಯಾಟ್ರಿಕ್ ಜಯಕ್ಕೆ ಕಸರತ್ತು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ನ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಶಿಷ್ಯೆ ಸುಷ್ಮಾ ರಾಜಗೋಪಾಲರೆಡ್ಡಿ ಅವರನ್ನು ಈ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ನಿಲ್ಲಿಸಿದ್ದಾರೆ. ಈಗ ಜೆಡಿಎಸ್‌ ಪರವಾಗಿ ಸ್ವಾಮೀಜಿ ರಂಗ ಪ್ರವೇಶಿಸಿದರೆ, ಕ್ಷೇತ್ರದ ಕದನ ಕುತೂಹಲ ಹೆಚ್ಚಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.