ರಾಮನಗರ: ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಅತಂತ್ರ ಪರಿಸ್ಥಿತಿ ಉದ್ಬವಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಶನಿವಾರ ಮತದಾನ ಮಾಡಿದ ಸಂದರ್ಭದಲ್ಲಿ ಅವರು ಪತ್ರಕರ್ತರ ಜೊತೆಗೆ ಮಾತನಾಡಿದರು. ಪಕ್ಷದ ಪರ ಎಲ್ಲೆಡೆ ಒಲವು ವ್ಯಕ್ತವಾಗುತ್ತಿದೆ. ಅದರಲ್ಲೂ ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡುತ್ತಿದ್ದಾರೆ ಎಂದರು. ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ, ಕಾಂಗ್ರೆಸ್ ಜೊತೆ ಕೈ ಜೋಡಿಸುವುದಿಲ್ಲ. ಯಾರ ಮನೆಯ ಬಾಗಿಲಿಗೂ ಹೋಗುವುದಿಲ್ಲ. ಅವರೂ ನನ್ನ ಮನೆ ಬಾಗಿಲಿಗೆ ಬರುವುದು ಬೇಡ ಎಂದರು.
ಉತ್ತರ ಕರ್ನಾಟಕ ಭಾಗದಲ್ಲಿಯೂ 30 ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ರಾಮನಗರ-ಚನ್ನಪಟ್ಟಣ ಎರಡೂ ಕಡೆಯೂ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆ ಮುಂದೂಡಿಕೆಯನ್ನು ಸ್ವಾಗತಿಸಿದ ಅವರು, ಅದಕ್ಕಾಗಿ ತಯಾರಿ ಮಾಡಿಕೊಳ್ಳುವುದಾಗಿ ತಿಳಿಸಿದರು. ಬಂಡಾಯ ಶಾಸಕರ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.