ADVERTISEMENT

ಜೆಡಿಎಸ್‌ -ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ; ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಮೇ 2018, 19:30 IST
Last Updated 6 ಮೇ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿಯಲ್ಲಿ ಶನಿವಾರ ರಾತ್ರಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕಾಂಗ್ರೆಸ್‌ ಕಾರ್ಯಕರ್ತರಾದ ಲೋಹಿತ್‌, ಅರ್ಜುನ್‌, ವಿದ್ಯಾಶಂಕರ್‌ ಮತ್ತು ಜಯದೇವ ಎಂದು ಗುರುತಿಸಲಾಗಿದೆ. ಇವರನ್ನು ನಗರದ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ರಾತ್ರಿ ನಾಗನಹಳ್ಳಿಯಲ್ಲಿ ಪಕ್ಷದ ಕಚೇರಿಯ ಹೊರಭಾಗದಲ್ಲಿ ನಿಂತಿದ್ದ ವೇಳೆ ಬೈಕುಗಳಲ್ಲಿ ಬಂದ ಜೆಡಿಎಸ್‌ ಕಾರ್ಯಕರ್ತರು ರಾಡ್‌ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆರೋಪಿಸಿದ್ದಾರೆ. ಮೇಟಗಳ್ಳಿ ಠಾಣೆಯ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ADVERTISEMENT

ಘಟನೆಗೆ ಕಾರಣ: ಚಲನಚಿತ್ರ ನಟ ದರ್ಶನ್‌ ಅವರು ಶನಿವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ್ದರು. ದರ್ಶನ್‌ ತಮ್ಮ ಗ್ರಾಮದಲ್ಲಿ ಪ್ರಚಾರ ನಡೆಸುವುದಕ್ಕೆ ನಾಗನಹಳ್ಳಿಯ ಜೆಡಿಎಸ್‌ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಜೆಡಿಎಸ್‌ ಬಾವುಟ ತೋರಿಸಿ ಪ್ರತಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ್ದರು. ಆ ಬಳಿಕ ಗ್ರಾಮದಲ್ಲಿ ಕೆಲಕಾಲ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರ ಮುಂದುವರಿದ ಭಾಗವಾಗಿ ಹಲ್ಲೆ ಘಟನೆ ನಡೆದಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಭೇಟಿ: ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಸಿದ್ದರಾಮಯ್ಯ ಭಾನುವಾರ ಭೇಟಿಯಾಗಿ ಸಾಂತ್ವನ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.