ನಾಯಕನಹಟ್ಟಿ: ‘ಯಾವುದಾದರೂ ಪಕ್ಷದವರು ಆಹ್ವಾನಿಸಿದರೆ, ಆ ಪಕ್ಷದಿಂದ ಕಣಕ್ಕಿಳಿಯುತ್ತೇನೆ. ಇಲ್ಲವೇ, ಸ್ವತಂತ್ರ ಅಭ್ಯರ್ಥಿಯಾಗಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಕಣದಿಂದ ಹಿಂದೆ ಸರಿಯುವುದಿಲ್ಲ’ ಎಂದು ಶಾಸಕ ಎಸ್. ತಿಪ್ಪೇಸ್ವಾಮಿ ಸ್ಪಷ್ಟಪಡಿಸಿದರು.
ಹೋಬಳಿಯ ನೇರಲಗುಂಟೆಯ ತಮ್ಮ ನಿವಾಸದಲ್ಲಿ ಶನಿವಾರ ಬೆಂಬಲಿಗರು, ಅಭಿಮಾನಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ ನಂತರ ಅವರು ಮಾತನಾಡಿದರು.
‘ಸಂಸದ ಶ್ರೀರಾಮುಲು ಹಾಗೂ ಬಿ.ಎಸ್. ಯಡಿಯೂರಪ್ಪ ಹಲವು ಕಾರ್ಯಕ್ರಮಗಳಲ್ಲಿ ನನಗೆ ಟಿಕೆಟ್ ಖಚಿತಪಡಿಸಿದ್ದರು. ಆದರೆ, ಇಬ್ಬರೂ ಆ ಮಾತನ್ನು ಉಳಿಸಿಕೊಳ್ಳುತ್ತಿಲ್ಲ. ಕೊಟ್ಟ ಮಾತಿಗೆ ತಪ್ಪಿ ವಚನಭ್ರಷ್ಟರಾಗಿದ್ದಾರೆ. ಇಷ್ಟೆಲ್ಲ ಬೆಳವಣಿಗೆಗಳಾಗಿದ್ದರೂ ಸೌಜನ್ಯಕ್ಕೂ ಶ್ರೀರಾಮುಲು ನನ್ನನ್ನು ಭೇಟಿ ಮಾಡಿ ಮಾತನಾಡಿಲ್ಲ' ಎಂದು ದೂರಿದರು.
‘ಶ್ರೀರಾಮುಲು ನಮ್ಮ ಬೆಂಬಲಿಗರ ಮೇಲೆ ಲಾಠಿ ಚಾರ್ಜ್ ಮಾಡಿಸಿ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ. ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುತ್ತೇನೆ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಅವರ ಸವಾಲನ್ನು ಸ್ವೀಕರಿಸಿದ್ದೇನೆ. ಇದೇ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಸ್ಪರ್ಧಿಸಿ, ಶ್ರೀರಾಮುಲು ಅವರನ್ನು ಸೋಲಿಸಿ, ಬಳ್ಳಾರಿಗೆ ವಾಪಸ್ ಕಳಿಸುತ್ತೇನೆ’ ಎಂದು ಪ್ರತಿ ಸವಾಲು ಹಾಕಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.