ADVERTISEMENT

ಮಲಗಲು ಬಿಡೆವು: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 20 ಮೇ 2018, 19:30 IST
Last Updated 20 ಮೇ 2018, 19:30 IST
ಮಲಗಲು ಬಿಡೆವು: ಶ್ರೀರಾಮುಲು
ಮಲಗಲು ಬಿಡೆವು: ಶ್ರೀರಾಮುಲು   

ಬಳ್ಳಾರಿ: ‘ಬಿ.ಎಸ್‌. ಯಡಿಯೂರಪ್ಪ ಅವರ ರಾಜೀನಾಮೆಯಿಂದ ನಾವೇನೂ ಕಂಗೆಟ್ಟಿಲ್ಲ; ಆದರೆ, ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ’ ಎಂದು ಶಾಸಕ ಬಿ. ಶ್ರೀರಾಮುಲು ಭಾನುವಾರ ಇಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಅವಕಾಶ ಮಾಡಿಕೊಡದೇ ಗೆದ್ದಿದ್ದಾಗಿ ಅವರು ಬೀಗುತ್ತಿದ್ದಾರೆ. ಆ ಎರಡೂ ಪಕ್ಷಗಳು ಹಿಂದಿನ ಚುನಾವಣೆಗಿಂತ ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಜನ ಅವರನ್ನು ತಿರಸ್ಕರಿಸಿದ್ದಾರೆ ಎಂಬುದನ್ನು ಮರೆಯಬಾರದು’ಎಂದರು.

‘ಭ್ರಷ್ಟಾಚಾರ ನಡೆಸಲು ಕಾಂಗ್ರೆಸ್‌ನವರು ಲೋಕಾಯುಕ್ತ ಸಂಸ್ಥೆಯ ಹಲ್ಲು ಮುರಿದಿದ್ದಾರೆ. ಮೈತ್ರಿ ಸರ್ಕಾರದ ಹೆಸರಿನಲ್ಲಿ ಈಗಲೂ ಭ್ರಷ್ಟಾಚಾರ ಮುಂದುವರಿಸಬಹುದು ಎಂದು ಭಾವಿಸಿದ್ದಾರೆ. ಆದರೆ, 104 ಸದಸ್ಯ ಬಲದ ಬಿಜೆಪಿ ಪ್ರಬಲ ಪ್ರತಿಪಕ್ಷವಾಗಿ ವಿಧಾನಸಭೆಯಲ್ಲಿ ಕೆಲಸ ನಿರ್ವಹಿಸಲಿದೆ. ಅವರ ಪ್ರತಿಯೊಂದು ಅಕ್ರಮವನ್ನೂ ಬಯಲಿಗೆಳೆಯಲಿದೆ. ದಿನದ 24 ತಾಸೂ ಅವರ ಕೆಲಸದ ಮೇಲೆ ನಿಗಾ ಇಡುತ್ತೇವೆ’ ಎಂದರು.

ADVERTISEMENT

‘ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಭಯದಿಂದ ಕಾಂಗ್ರೆಸ್‌– ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿವೆ. ಈ ಮೈತ್ರಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ’ ಎಂದರು.

* ಬಿಜೆಪಿ ಅಧಿಕಾರಕ್ಕೆ ಬಂದರೆ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಭಯದಿಂದ ಕಾಂಗ್ರೆಸ್‌–ಜೆ.ಡಿ.ಎಸ್‌. ಹೊಂದಾಣಿಕೆ ಮಾಡಿಕೊಂಡಿವೆ. ಈ ಮೈತ್ರಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ.

-ಬಿ. ಶ್ರೀರಾಮುಲು, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.