ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವ ಗುರುವಾರವೂ ಮುಂದುವರಿದಿದ್ದು, ನಟ ಶಶಿಕುಮಾರ್ ಜೆಡಿಎಸ್ ಮತ್ತು ದಲಿತ ಮುಖಂಡ ಛಲವಾದಿ ನಾರಾಯಣಸ್ವಾಮಿ ಬಿಜೆಪಿ ಸೇರಲು ಅಣಿಯಾಗಿದ್ದಾರೆ.
ಟಿಕೆಟ್ ಸಿಗದೇ ಆಕ್ರೋಶ ವ್ಯಕ್ತಪಡಿಸಿದ ಜತೆಗೆ, ಅತ್ತು ಕರೆದು ಗೋಳಾಡಿದ್ದ ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಜೆಡಿಎಸ್ ಸೇರಿದ್ದಾರೆ.
ಮಾಜಿ ಸಂಸದ ಮತ್ತು ನಟ ಶಶಿ ಕುಮಾರ್ ಹೊಸದುರ್ಗ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ನಿರಾಕರಿಸಿದ ಕಾರಣ ಕಾಂಗ್ರೆಸ್ ತೊರೆದಿದ್ದಾರೆ. ಜೆಡಿಎಸ್ ಟಿಕೆಟ್ನಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ಭೇಟಿಯಾದ ಛಲವಾದಿ ನಾರಾಯಣಸ್ವಾಮಿ, ದೇವನ
ಹಳ್ಳಿ ಮೀಸಲು ಕ್ಷೇತ್ರದ ಟಿಕೆಟ್ ಕೇಳಿದ್ದಾರೆಂದು ಮೂಲಗಳು ತಿಳಿಸಿವೆ.
ಖಂಡ್ರೆ ರಾಜೀನಾಮೆ: ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಪ್ರಕಾಶ್ ಖಂಡ್ರೆ, ಬಿ.ಎಸ್.ಯಡಿಯೂರಪ್ಪ ಅವರಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ.
‘ಬಿಜೆಪಿಯಲ್ಲಿ ಶಿಸ್ತಿನ ಸಿಪಾಯಿಯಾಗಿ ಕಾರ್ಯ ನಿರ್ವಹಿಸಿದ್ದೆ. ಪರಿವರ್ತನಾ ರ್ಯಾಲಿಯಲ್ಲಿ ನನ್ನನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೀರಿ. ಆದರೆ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಡಿ.ಕೆ.ಸಿದ್ರಾಮ ಅವರಿಗೆ ಟಿಕೆಟ್ ನೀಡಿದ್ದೀರಿ’ ಎಂದು ಬೇಸರ ತೋಡಿಕೊಂಡಿದ್ದಾರೆ.
ಕಾಂಗ್ರೆಸ್ನ ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹಾವೇರಿಯಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ಅದನ್ನು ಅವರು ಕೂಡಲೇ ಅಂಗೀಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.