ADVERTISEMENT

ವಿದೇಶಕ್ಕೂ ವ್ಯಾಪಿಸಿದ ಚುನಾವಣಾ ಜ್ವರ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2018, 20:05 IST
Last Updated 8 ಏಪ್ರಿಲ್ 2018, 20:05 IST
ವಿದೇಶಕ್ಕೂ ವ್ಯಾಪಿಸಿದ ಚುನಾವಣಾ ಜ್ವರ
ವಿದೇಶಕ್ಕೂ ವ್ಯಾಪಿಸಿದ ಚುನಾವಣಾ ಜ್ವರ   

ಮಂಗಳೂರು: ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಕೂಡಿದ್ದು, ಪ್ರತಿ ಕ್ಷೇತ್ರದಲ್ಲಿಯೂ ತುರುಸಿನ ಪ್ರಚಾರ ಆರಂಭವಾಗಿದೆ. ಇದೀಗ ಚುನಾವಣಾ ಪ್ರಚಾರ ದೇಶದ ಗಡಿಯನ್ನು ದಾಟಿ ವಿದೇಶಿ ನೆಲಕ್ಕೂ ವ್ಯಾಪಿಸಿರುವುದು ವಿಶೇಷವಾಗಿದೆ.

ಹೈದರಾಬಾದ್‌ ಕರ್ನಾಟಕದ ಬಹುತೇಕ ಕ್ಷೇತ್ರಗಳ ಶಾಸಕರು, ತಮ್ಮ ಕ್ಷೇತ್ರಗಳಿಗಿಂತ ಹೆಚ್ಚಾಗಿ ಬೆಂಗಳೂರು, ಹೈದರಾಬಾದ್‌, ಪುಣೆ, ಮುಂಬೈನಂತಹ ಮಹಾನಗರಗಳಲ್ಲಿಯೇ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದ ಬಹುತೇಕ ಮತದಾರರು ಮಹಾನಗರಗಳಿಗೆ ಗುಳೆ ಹೋಗಿರುವುದೇ ಇದಕ್ಕೆ ಕಾರಣ. ಇದೇ ಮಾದರಿಯಲ್ಲಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಹಿಯುದ್ದೀನ್‌ ಬಾವ, ಇದೀಗ ವಿದೇಶದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಮಂಗಳೂರು ಶಾಸಕ ಯು.ಟಿ.ಖಾದರ್‌, ಬಂಟ್ವಾಳ ಶಾಸಕ ಬಿ.ರಮಾನಾಥ ರೈ, ಕಾಪು ಶಾಸಕ ವಿನಯಕುಮಾರ್ ಸೊರಕೆ ಅವರೂ ಜೆಡ್ಡಾ
ದಲ್ಲಿದ್ದು, ಎಲ್ಲರಿಗೂ ಭರ್ಜರಿ ಸ್ವಾಗತ ಲಭಿಸಿದೆ.

ADVERTISEMENT

ಕರಾವಳಿ ಭಾಗದ ಸಾಕಷ್ಟು ಜನರು ಸೌದಿ ಅರೇಬಿಯಾ, ಕುವೈತ್‌, ಬಹರೇನ್‌, ಕತಾರ್‌, ದುಬೈನಲ್ಲಿ ಉದ್ಯೋಗ ಮಾಡುತ್ತಿದ್ದು, ಈ ನಾಲ್ವರೂ ಪ್ರತಿನಿಧಿಸುವ ಕ್ಷೇತ್ರಗಳ ಮಂದಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇಂತಹ ಮತದಾರರನ್ನು ಓಲೈಸಲು ಇದೀಗ ಪ್ರಯತ್ನ ನಡೆದಿರುವುದರ ಬಗ್ಗೆ ಜಾಲತಾಣಗಳಲ್ಲಿ ಚರ್ಚೆ ನಡೆಯತೊಡಗಿದೆ.

ಸೌದಿ ಅರೇಬಿಯಾದ ಜೆಡ್ಡಾದ ಇಂಪಾಲಾ ಗಾರ್ಡನ್‌ನಲ್ಲಿ ಇದೇ 6ರಂದು ಸಂಜೆ 4 ಗಂಟೆಗೆ ‘ಮತ್ತೊಮ್ಮೆ ಬಾವಾಕಾ’ ಎನ್ನುವ ಕಾರ್ಯಕ್ರಮ
ಏರ್ಪಡಿಸಲಾಗಿತ್ತು. ಈ ಕುರಿತು ಬ್ಯಾನರ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ಬ್ಯಾನರ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಚಿಹ್ನೆಯನ್ನೂ ಹಾಕಲಾಗಿದೆ. ಮೆಕ್ಕಾ ಪ್ರವಾಸದ ನೆಪದಲ್ಲಿ, ಸೌದಿ ಅರೇಬಿಯಾದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನು ಶಾಸಕ ಬಾವ ನಡೆಸಿದ್ದಾರೆ.

ಪ್ರಚಾರ ಸಭೆಯ ವಿಡಿಯೊ ತುಣುಕೊಂದು ಬಾವ ಅವರ ಫೇಸ್‌ಬುಕ್‌ ಪೇಜ್‌ನಲ್ಲಿ ಅಪ್‌ಲೋಡ್‌ ಆಗಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ ಅವರ ಭಾವಚಿತ್ರಗಳನ್ನು ಒಳಗೊಂಡ ಕಾಂಗ್ರೆಸ್‌ ಪಕ್ಷದ ಬೃಹತ್‌ ಬ್ಯಾನರ್‌, ಬಂಟಿಂಗ್‌ಗಳನ್ನು ಹಾಕಿರುವುದು ವಿಡಿಯೊದಲ್ಲಿ ಸ್ಪಷ್ಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.