ತುಮಕೂರು: ‘ಬಯಲು ಸೀಮೆ ಪ್ರದೇಶಗಳಾದ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರಕ್ಕೆ ಶಾಶ್ವತ ನೀರಾವರಿ ಕಲ್ಪಿಸಲು ನನ್ನದೇ ಆದ ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ. ಅವುಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುರುವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಎತ್ತಿನಹೊಳೆ, ಭದ್ರಾ ಸೇರಿದಂತೆ ಯಾವುದೇ ನೀರಾವರಿ ಯೋಜನೆಗಳಲ್ಲಿ ಅಕ್ರಮ ನಡೆಯಲು ನಮ್ಮ ಸರ್ಕಾರದಲ್ಲಿ ಅವಕಾಶವಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಾಗಲಿ, ಪ್ರಚಾರ ಸಭೆಗಳಲ್ಲಾಗಲಿ ಈ ಯೋಜನೆಗಳ ಭ್ರಷ್ಟಾಚಾರದ ಬಗ್ಗೆ ಮಾತನಾಡಿಲ್ಲ. ಅದರ ಬಗ್ಗೆ ಮಾತನಾಡಿ ನನ್ನ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ’ ಎಂದು ಹೇಳಿದರು.
ತನಿಖೆಗೆ ಸೂಚನೆ: ‘ಮಕ್ಕಳ ಅಪಹರಣ ಎಂಬುದು ವದಂತಿಯಾಗಿದ್ದು, ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಆದೇಶಿಸಿದ್ದೇನೆ’ ಎಂದು ಹೇಳಿದರು.
‘ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಬುಧವಾರ ಅಮಾಯಕ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಆತ ಸಾವಿಗೀಡಾದ ಬಗ್ಗೆ ಕೂಲಂಕಷ ತನಿಖೆ ನಡೆಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.