ಬೆಳಗಾವಿ: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ಅವರು ‘ಸೇವೆ’ ಎನ್ನುವ ಪದವನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಭಾನುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸೇವೆ ಪದವನ್ನು ಅಪಾರ್ಥ ಮಾಡಿಕೊಂಡರೆ ಅದಕ್ಕೆ ನಾನು ಹೊಣೆಯಲ್ಲ’ ಎಂದರು.
‘ಜಯಮಾಲಾ ಅಕ್ಕನ ಜತೆ ನನಗೆ ಒಳ್ಳೆಯ ಸಂಬಂಧವಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬೆಂಗಳೂರಿನಲ್ಲಿ ನಡೆಸಿದ ಹೋರಾಟ ಮತ್ತು ಕಾರ್ಯಕ್ರಮಗಳ ಸಂದರ್ಭದಲ್ಲಿ ಮೊದಲ ಫೋನ್ ಅವರಿಗೇ ಮಾಡುತ್ತಿದ್ದೆ. ಎಲ್ಲ ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದ ಅವರು ನನ್ನನ್ನು ಬೆನ್ನು ತಟ್ಟಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ನನಗೆ ಬೇಸರ ಇಲ್ಲ. ಹೊಟ್ಟೆಕಿಚ್ಚು ಕೂಡ ಇಲ್ಲ’ ಎಂದರು.
‘ಉತ್ತರ ಕರ್ನಾಟಕದಲ್ಲಿ ‘ಸೇವೆ’ ಎಂದರೆ ಪಕ್ಷದ ಸೇವೆ ಎಂದರ್ಥ. ಅದಕ್ಕೆ ತಪ್ಪು ಅರ್ಥ ಕಲ್ಪಿಸಬೇಡಿ. ಆ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.