ADVERTISEMENT

ಜೆಡಿಎಸ್‌– ಬಿಎಸ್‌ಪಿ ಹೊಂದಾಣಿಕೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 8:48 IST
Last Updated 8 ಫೆಬ್ರುವರಿ 2018, 8:48 IST

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಜೊತೆ ಹೊಂದಾಣಿಕೆಗೆ ಜೆಡಿಎಸ್ ಸಿದ್ಧತೆ ನಡೆಸಿದೆ.

ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಡ್ಯಾನಿಷ್‌ ಅಲಿ ಈ ಸಂಬಂಧ ಬಿಎಸ್‌ಪಿ ನಾಯಕಿ ಮಾಯಾವತಿ ಜತೆ ಮಾತುಕತೆ ನಡೆಸಿದ್ದು, ಈ ಪ್ರಸ್ತಾವಕ್ಕೆ ಮಾಯಾವತಿ ಒಪ್ಪಿಗೆ ನೀಡಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಮಾಯಾವತಿ ಜತೆಗಿನ ಮಾತುಕತೆಯ ವಿವರಗಳನ್ನು ಡ್ಯಾನಿಷ್‌ ಅಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿಗೆ ತಿಳಿಸಿದರು. ಹೊಂದಾಣಿಕೆ ಕುರಿತ ಕೆಲವು ಮಾಹಿತಿಗಳನ್ನು ಮಾಯಾವತಿಗೆ ದೇವೇಗೌಡರು ಕಳುಹಿಸಿದ್ದಾರೆ. ಬಿಎಸ್‌ಪಿಗೆ ಎಷ್ಟು ಸ್ಥಾನಗಳನ್ನು ಬಿಟ್ಟುಕೊಡಬೇಕೆಂಬ ವಿಷಯಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಯಲಿದೆ.

ADVERTISEMENT

ಮಾಯಾವತಿ ಜೆಡಿಎಸ್‌ ಜತೆ ಕೈ ಜೋಡಿಸುವುದರಿಂದ ದಲಿತ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಜೆಡಿಎಸ್‌ಗೆ ಬರುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಇದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾಯಾವತಿ ರಾಜ್ಯಕ್ಕೆ ಬರಲಿದ್ದಾರೆ ಎಂದು ಮೂಲಗಳು ಹೇಳಿವೆ.

ಇದೇ 17 ರಂದು ನಗರದಲ್ಲಿ ಪಕ್ಷದ ವತಿಯಿಂದ ಸಮಾವೇಶವೊಂದನ್ನು ಆಯೋಜಿಸಲಾಗಿದ್ದು, ಇದರಲ್ಲಿ 125 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.