ಮಂಡ್ಯ: ‘ಮೀಸಲಾತಿ ಸೌಲಭ್ಯ ಕಲ್ಪಿಸಿ 70 ವರ್ಷಗಳಾಗಿದ್ದರೂ ಸಾಮಾನ್ಯ ಜನರ ಪರಿಸ್ಥಿತಿ ಬದಲಾಗಿಲ್ಲ. ಮೀಸಲಾತಿಗಿಂತಲೂ ಮತದಾನದ ಹಕ್ಕು ಬಲು ದೊಡ್ಡ ಶಕ್ತಿಯಾಗಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಹಿಂದುಳಿದ ವರ್ಗ ಗಳ ಘಟಕ ಗುರುವಾರ ಆಯೋಜಿಸಿದ್ದ ಮಡಿವಾಳರ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.
‘ಮೀಸಲಾತಿ ವ್ಯವಸ್ಥೆ ದಲಿತರು, ಹಿಂದುಳಿದವರ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಯನ್ನು ಎಷ್ಟರ ಮಟ್ಟಿಗೆ ಸುಧಾರಿಸಿದೆ ಎಂಬ ಪ್ರಶ್ನೆ ಕಾಡುತ್ತಿದೆ. ಮೀಸಲಾತಿಯಿಂದ ಒಂದು ಹೆಜ್ಜೆ ಮುಂದೆ ಹೋಗಿ ಚಿಂತಿಸಬೇಕಾಗಿದೆ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮೀಸಲಾತಿ ಮಾತ್ರ
ವಲ್ಲದೆ ಮತದಾನದ ಹಕ್ಕನ್ನೂ ಕೊಟ್ಟಿದ್ದಾರೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಅಶಕ್ತ ಜನರು ತಮ್ಮ ಹಕ್ಕು ಪಡೆಯಬಹುದಾಗಿದೆ’ ಎಂದರು.
‘ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಹೇಳಿದರು.
ಬೇರೆ ಪಕ್ಷಗಳ ಸಹವಾಸ ಬೇಡ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಾತನಾಡಿ, ‘ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದರೆ ಮುಂಬರುವ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಬೇರೆ ಪಕ್ಷಗಳ ಸಹವಾಸ ಮಾಡಬಾರದು. ಮತ್ಯಾರದ್ದೋ ಸಹಾಯ ಪಡೆದು ಸರ್ಕಾರ ರಚಿಸಿದರೆ ಸ್ವತಂತ್ರವಾಗಿ ಜನರ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯಬೇಕು. ಪಕ್ಷಕ್ಕೆ ಬಹುಮತ ಬಂದರೆ ಮಡಿವಾಳರ ಎಲ್ಲಾ ಬೇಡಿಕೆಗಳು ಈಡೇರುತ್ತವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.