ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಸಿಂಧೆ ಭೀಮಸೇನ ರಾವ್ ಅವರು ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಕಾರಣಕ್ಕೆ, ಅವರು ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಯ ಹಾಲಿ ಶಾಸಕ ಪ್ರಭು ಚೌಹಾಣ್ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿರುವ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಶಂಕರಾನಂದ ಅವರ ಅಳಿಯ ಸಿಂಧೆಗೆ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ, ಹೈಕಮಾಂಡ್ನಿಂದಲೂ ಟಿಕೆಟ್ ನೀಡುವ ಆಶ್ವಾಸನೆ ಸಿಕ್ಕಿದೆ ಎಂದು ಗೊತ್ತಾಗಿದೆ.
ಶನಿವಾರದಿಂದಲೇ (ಫೆ. 10) ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುವಂತೆ ಸಿಂಧೆಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
‘ವಿವಿಧ ಹುದ್ದೆಗಳಲ್ಲಿ 33 ವರ್ಷ ಕರ್ತವ್ಯ ನಿರ್ವಹಿಸಿರುವ ನಾನು, 2001ರಿಂದ ಮುಖ್ಯಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿ, ಉಪ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ರಾಜಕೀಯದ ಮೂಲಕ ಜನಸೇವೆ ಮಾಡುವ ಉದ್ದೇಶದಿಂದ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ’ ಎಂದು ಸಿಂಧೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.