ADVERTISEMENT

ಮುನಿಯಪ್ಪ ಗೆಲುವಿಗೆ ಕೋಲಾರಮ್ಮ ದೇವಾಲಯದಲ್ಲಿ ಈಡುಗಾಯಿ ಹರಕೆ

​ಪ್ರಜಾವಾಣಿ ವಾರ್ತೆ
Published 3 ಮೇ 2019, 11:06 IST
Last Updated 3 ಮೇ 2019, 11:06 IST
ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪರ ಗೆಲುವಿಗೆ ಪ್ರಾರ್ಥಿಸಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೋಲಾರದ ಕೋಲಾರಮ್ಮ ದೇವಾಲಯದಲ್ಲಿ ಮಂಗಳವಾರ ಈಡುಗಾಯಿ ಒಡೆದರು.
ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪರ ಗೆಲುವಿಗೆ ಪ್ರಾರ್ಥಿಸಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೋಲಾರದ ಕೋಲಾರಮ್ಮ ದೇವಾಲಯದಲ್ಲಿ ಮಂಗಳವಾರ ಈಡುಗಾಯಿ ಒಡೆದರು.   

ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪರ ಗೆಲುವಿಗೆ ಪ್ರಾರ್ಥಿಸಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ನಗರದ ಕೋಲಾರಮ್ಮ ದೇವಾಲಯದಲ್ಲಿ 2010 ತೆಂಗಿನ ಕಾಯಿಗಳನ್ನು ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.

ಸ್ವಪಕ್ಷೀಯರ ವಿರೋಧದ ನಡುವೆಯೂ ಮುನಿಯಪ್ಪ ಅವರು ಸುಗಮವಾಗಿ ಕಾಂಗ್ರೆಸ್ ಟಿಕೆಟ್ ಪಡೆದುಕೊಂಡಿದ್ದಕ್ಕೆ ಬೆಂಬಲಿಗರು ಹರ್ಷ ವ್ಯಕ್ತಪಡಿಸಿ, ‘ಮುನಿಯಪ್ಪರು ಈ ಬಾರಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿ’ ಎಂದು ಪ್ರಾರ್ಥಿಸಿದರು.

‘ಮುನಿಯಪ್ಪ ಅವರು ಸತತ 7 ಬಾರಿ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದಾರೆ. ಅವರ 8ನೇ ಬಾರಿ ಅತ್ಯಧಿಕ ಗೆಲುವು ಮತಗಳ ಅಂತರದಿಂದ ಗೆಲುವು ಸಾಧಿಸಬೇಕೆಂದು ಈಡುಗಾಯಿ ಹರಕೆ ತೀರಿಸಲಾಯಿತು’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಹೇಳಿದರು.

ADVERTISEMENT

‘ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರು ರೌಡಿ ಪಟ್ಟಿಯಲ್ಲಿದ್ದಾರೆ. ಅವರ ಸ್ಪರ್ಧೆಯಿಂದಾಗಿ ಸಜ್ಜನ ರಾಜಕಾರಣಿ ಮುನಿಯಪ್ಪರ ಗೆಲುವಿನ ಹಾದಿ ಸುಗಮವಾಗಿದೆ. ಈ ಬಾರಿ ಮುನಿಯಪ್ಪ ಅವರು ಹಿಂದಿನ ಚುನಾವಣೆಗಳಿಗಿಂತಲೂ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ’ ಎಂದು ಜಿಲ್ಲಾ ಕಾಂಗ್ರೆಸ್ ಎಸ್‍ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ವಿಶ್ವಾಸ ವ್ಯಕ್ತಪಡಿಸಿದರು.

ಈಡುಗಾಯಿ ಒಡೆಯುವುದಕ್ಕೂ ಮುನ್ನ ಕೋಲಾರಮ್ಮ ದೇವಿಗೆ ಪೂಜೆ ಸಲ್ಲಿಸಲಾಯಿತು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಕಾಂಗ್ರೆಸ್‌ ಮುಖಂಡರಾದ ಕುಮಾರ್, ರಾಮಯ್ಯ, ನಾರಾಯಣಸ್ವಾಮಿ, ರವಿಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.