ADVERTISEMENT

ಪಕ್ಷೇತರ ಅಭ್ಯರ್ಥಿಯಾಗಿ ನಾಯಕವಾಡಿ ಕಣಕ್ಕೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 12:09 IST
Last Updated 26 ಮಾರ್ಚ್ 2019, 12:09 IST

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿನ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸಲು ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಯುವ ಮುಖಂಡ ರಾಜು ನಾಯಕವಾಡಿ ಪ್ರಕಟಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎನ್‌ಸಿಪಿ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೆ. ಆ ಪಕ್ಷದಿಂದಲೇ ಟಿಕೆಟ್‌ ಕೇಳಿದ್ದೆ. ಆದರೆ, ಕರ್ನಾಟಕದಲ್ಲಿ ಎನ್‌ಸಿಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ. ಹೀಗಾಗಿ, ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷೇತರನಾಗಿ ಸ್ಪರ್ಧಿಸುವ ಉದ್ದೇಶವಿದೆ’ ಎಂದರು.

‘ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಕೊನೆಗಳಿಗೆಯಲ್ಲಿ ಕಾರಣಾಂತರಗಳಿಂದ ನಾಮಪತ್ರ ವಾಪಸ್‌ ಪಡೆದಿದ್ದೆ. ಈ ಬಾರಿ ಎಷ್ಟೇ ಒತ್ತಡಗಳು ಬಂದರೂ ವಾಪಸ್‌ ಪಡೆಯುವುದಿಲ್ಲ’ ಎಂದು ಹೇಳಿದರು.

ADVERTISEMENT

ಎನ್‌ಸಿಪಿಯ ಯುವ ಘಟಕದ ಮುಖಂಡರಾದ ಲಕ್ಷ್ಮಣ ದೀಕ್ಷಿತ, ಸಿದ್ದು ಪೂಜಾರ, ಕುಬೇರ ಪವಾರ ಹಾಗೂ ರಾಘವೇಂದ್ರ ಜಗಳೂರ, ‘ಸಂಸದ ಪ್ರಹ್ಲಾದ ಜೋಶಿ ಅವರು ಜಿಲ್ಲೆಯ ಜನರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ, ಯುವ ಧುರೀಣ ರಾಜು ಅವರನ್ನು ಬೆಂಬಲಿಸುತ್ತಿದ್ದೇವೆ. ಪಕ್ಷದ ಕಾರ್ಯಕರ್ತರಿಗೂ ರಾಜು ಅವರ ಪರ ಪ್ರಚಾರ ಮಾಡುವಂತೆ ತಿಳಿಸಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.