ADVERTISEMENT

ಪ್ರತ್ಯೇಕ ಲಿಂಗಾಯತ ಧರ್ಮ ಮುಗಿದ ಅಧ್ಯಾಯ: ಶಾಮನೂರು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 11:54 IST
Last Updated 12 ಏಪ್ರಿಲ್ 2019, 11:54 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ಕಲಬುರ್ಗಿ: ‘ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಮುಗಿದ ಅಧ್ಯಾಯ’ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೀರಶೈವ–ಲಿಂಗಾಯತ ಎಲ್ಲಾ ಒಂದೇ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹೊಡೆದಾಟ, ಬಡೆದಾಟ ಏನಿದ್ದರೂ ಸ್ವಾಮಿಗಳದ್ದೇ ನಡೆಯುತ್ತಿದೆ’ ಎಂದರು.

‘ವೀರಶೈವ– ಲಿಂಗಾಯತರ ಮಧ್ಯೆ ಭಿನ್ನಮತ ಇಲ್ಲ. ಸ್ವಾಮೀಜಿಗಳನ್ನು ರಾಜಕೀಯದಿಂದ ದೂರವಿಟ್ಟರೆ ಎಲ್ಲವೂ ಸರಿ ಹೋಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆಸುತ್ತಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿ ದೇಶದಾದ್ಯಂತ ದಾಳಿ ಮಾಡಿಸುತ್ತಿದ್ದಾರೆ’ ಎಂದು ದೂರಿದರು.

ADVERTISEMENT

‘ಈ ಹಿಂದೆ ಯಾವತ್ತೂ ಈ ರೀತಿ ಆಗಿಲ್ಲ. ಇಂದಿರಾಗಾಂಧಿ ಅವರನ್ನು ಕೆಲವರು ಹಿಟ್ಲರ್ ತರಹ ಎನ್ನುತ್ತಿದ್ದರು. ಆದರೆ, ಮೋದಿ ಹಿಟ್ಲರ್ ಅಪ್ಪ ಆಗಿದ್ದಾನೆ’ ಎಂದು ಆರೋಪಿಸಿದರು.

‘ಲೋಕಸಭೆ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಪತನ’ ಎಂಬ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣೆ ನಂತರ ಸರ್ಕಾರ ಪತನವಾಗುವುದಿಲ್ಲ. ಆದರೆ, ಯಡಿಯೂರಪ್ಪನವರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷಗಿರಿ ಹೋಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.