ಕೋಲಾರ: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವತ್ರಿಕ ಚುನಾವಣೆ ಮತ್ತು ಮತದಾನಕ್ಕೆ ಹೆಚ್ಚು ಮಹತ್ವವಿದೆ. ಸರ್ಕಾರ ರಚನೆ ಹಾಗೂ ದೇಶದ ಅಭಿವೃದ್ಧಿಯಲ್ಲಿ ಮತದಾನ ನಿರ್ಣಾಯಕ ಪಾತ್ರ ವಹಿಸುತ್ತದೆ’ ಎಂದು ನಗರಸಭೆ ಕಂದಾಯ ಅಧಿಕಾರಿ ತ್ಯಾಗರಾಜ್ ಅಭಿಪ್ರಾಯಪಟ್ಟರು.
ಕಡಿಮೆ ಪ್ರಮಾಣದಲ್ಲಿ ಮತದಾನವಾಗಿರುವ ನಗರದ ವಾರ್ಡ್ಗಳಲ್ಲಿ ನಗರಸಭೆಯು ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಜಗತ್ತಿನ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಅತ್ಯುತ್ತಮವಾಗಿದೆ. ಕಡ್ಡಾಯವಾಗಿ ಮತದಾನ ಮಾಡಿದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ಸಿನ ಹಾದಿಯಲ್ಲಿ ಸಾಗಲಿದೆ’ ಎಂದು ಕಿವಿಮಾತು ಹೇಳಿದರು.
‘ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಮೂಲ ಕ್ರಿಯೆಯಾಗಿರುವ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು. ಮತದಾನದ ಬಗ್ಗೆ ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು. ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವ ತಿಳಿಸಿ ಮತಗಟ್ಟೆಗೆ ಕರೆತರಬೇಕು’ ಎಂದು ಸಲಹೆ ನೀಡಿದರು.
‘ಪ್ರಜಾತಂತ್ರದ ಉಳಿವು, ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಸ್ವಚ್ಛ ರಾಜಕಾರಣಕ್ಕೆ ಮತದಾನವು ಭದ್ರ ಬುನಾದಿ. ಜನಾನುರಾಗಿ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಆಯ್ಕೆಗೆ ಮತದಾನ ಒಳ್ಳೆಯ ಅಸ್ತ್ರ. ಈ ಅಸ್ತ್ರವನ್ನು ವಿವೇಚನೆಯಿಂದ ಬಳಸಬೇಕು. ಮತದಾನದ ದಿನ ರಜೆ ಸಿಕ್ಕಿದೆ ಎಂದು ಸುತ್ತಾಡಲು ಪ್ರವಾಸ ಹೋಗುವುದು ಅಥವಾ ಕುಟುಂಬ ಸದಸ್ಯರ ಜತೆ ಮನೆಯಲ್ಲೇ ಕಾಲಹರಣ ಮಾಡುವುದನ್ನು ಬಿಟ್ಟು ಮತಗಟ್ಟೆಗೆ ಬಂದು ಮತ ಹಾಕಬೇಕು’ ಎಂದು ಮನವಿ ಮಾಡಿದರು,
ನಗರದ 5 ಕಡೆಗಳಲ್ಲಿ ಕಡ್ಡಾಯ ಮತ್ತು ನೈತಿಕ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ನಗರಸಭೆ ಸಿಬ್ಬಂದಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.