ADVERTISEMENT

ಬಡವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿತ್ತೇ: ರಾಹುಲ್‌ಗೆ ಮಾಳವಿಕಾ ಅವಿನಾಶ್ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 11:12 IST
Last Updated 9 ಏಪ್ರಿಲ್ 2019, 11:12 IST
ಮಾಳವಿಕಾ ಅವಿನಾಶ್
ಮಾಳವಿಕಾ ಅವಿನಾಶ್   

ಹುಬ್ಬಳ್ಳಿ: ‘ಬಡವರ ಖಾತೆಗೆ ವಾರ್ಷಿಕ ₹72 ಸಾವಿರ ಸಂದಾಯ ಮಾಡುವ ಮೂಲಕ ಬಡತನ ನಿರ್ಮೂಲನೆ ಮಾಡಿ ನ್ಯಾಯ ಕೊಡಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈಗ ಹೇಳುತ್ತಿದ್ದಾರೆ. ಹಾಗಿದ್ದರೆ ಇಲ್ಲಿಯ ವರೆಗೆ ಕಾಂಗ್ರೆಸ್ ಬಡವರಿಗೇ ಅನ್ಯಾಯ ಮಾಡಿತ್ತೇ? ಬಡತನ ನಿರ್ಮೂಲನೆ ಘೋಷಣೆ ಸುಳ್ಳೇ’ ಎಂದು ಬಿಜೆಪಿ ಸಹ ವಕ್ತಾರೆ ಮಾಳವಿಕಾ ಅವಿನಾಶ್ ಪ್ರಶ್ನಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡತನ ನಿರ್ಮೂಲನೆಗಾಗಿ ‘ನ್ಯಾಯ್‌’ ಯೋಜನೆ ಎಂದು ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಕೇವಲ ಘೋಷನೆಯನ್ನಷ್ಟೇ ಮಾಡುತ್ತದೆ. ಅದನ್ನು ಜಾರಿ ಮಾಡುವುದಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಆದರೆ, ಬಿಜೆಪಿ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದ್ದು, ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂದರು.

ದೇಶ ಮೊದಲು ಎಂಬುದು ಬಿಜೆಪಿಯ ತತ್ವವಾಗಿದ್ದು, ದೇಶದ ಆಂತರಿಕ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಿದೆ. ಸೇನೆಯ ಆಧುನೀಕರಣಕ್ಕೆ ಹೆಚ್ಚಿನ ಒತ್ತು ನೀಡಿ ಸೇನೆಯ ಆತ್ಮಸ್ಥೈರ್ಯವನ್ನು ಹೆಚ್ಚಿಸಲಿದೆ. ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಒಟ್ಟು ರಾಷ್ಟ್ರೀಯ ಉತ್ಪನ್ನದ ಪ್ರಮಾಣ ಈಗ 7.2ರಷ್ಟಿದೆ. ಸ್ವಚ್ಛ ಭಾರತ ಅಭಿಯಾನದಲ್ಲಿ 9 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಭ್ರಷ್ಟಾಚಾರ ಮತ್ತು ದೇಶದ ರಕ್ಷಣೆ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಂಡಿಲ್ಲ ಎಂದು ಹೇಳಿದರು.

ADVERTISEMENT

ಬಿಜೆಪಿ ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ಹನುಮಂತಪ್ಪ ದೊಡ್ಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.