ADVERTISEMENT

ನೀರಿಗೆ ಒತ್ತಾಯಿಸಿ ಶಿರಾ ತಾಲ್ಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಶಾಸಕರಿಗೆ ಘೇರಾವ್

ಮತದಾನ ಬಹಿಷ್ಕಾರದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 12:41 IST
Last Updated 9 ಏಪ್ರಿಲ್ 2019, 12:41 IST
ಶಿರಾ ತಾಲ್ಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕುಡಿಯುವ ನೀರಿಗಾಗಿ ಆಗ್ರಹಿಸಿ ಶಾಸಕ ಬಿ.ಸತ್ಯನಾರಾಯಣ ಅವರ ಕಾರು ತಡೆದು ಪ್ರತಿಭಟನೆ ನಡೆಸಲಾಯಿತು
ಶಿರಾ ತಾಲ್ಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕುಡಿಯುವ ನೀರಿಗಾಗಿ ಆಗ್ರಹಿಸಿ ಶಾಸಕ ಬಿ.ಸತ್ಯನಾರಾಯಣ ಅವರ ಕಾರು ತಡೆದು ಪ್ರತಿಭಟನೆ ನಡೆಸಲಾಯಿತು   

ಶಿರಾ: ತಾಲ್ಲೂಕಿನ ಲಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಶಾಸಕ ಬಿ.ಸತ್ಯನಾರಾಯಣ ಅವರಿಗೆ ಲಕ್ಕನಹಳ್ಳಿ ಮತ್ತು ಮಾರುತಿ ಕಾಲೊನಿಯ ಮಹಿಳೆಯರು ಕುಡಿಯುವ ನೀರಿಗೆ ಆಗ್ರಹಿಸಿ ಘೇರಾವ್ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿದರು. ಒಂದು ವೇಳೆ ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.

ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಪರ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಶಾಸಕ ಬಿ.ಸತ್ಯನಾರಾಯಣ ಕಾರನ್ನು ಶಿರಾ ತಾಲ್ಲೂಕಿನ ಲಕ್ಕನಹಳ್ಳಿ ಹಾಗೂ ಮಾರುತಿ ಕಾಲೊನಿಯಲ್ಲಿ ತಡೆದ ನೂರಾರು ಮಹಿಳೆಯರು ಪ್ರತಿಭಟನೆ ವ್ಯಕ್ತಪಡಿಸಿದರು.

ತಾಲ್ಲೂಕಿನ ಲಕ್ಕನಹಳ್ಳಿ ಮತ್ತು ಮಾರುತಿ ಕಾಲೊನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹಲವಾರು ತಿಂಗಳಿನಿಂದ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಸಹ ಸಮಸ್ಯೆ ಬಗೆಹರಿಸುತ್ತಿಲ್ಲ. ನೀರಿಗಾಗಿ ಜನ ಸಂಕಷ್ಟ ಪಡುತ್ತಿದ್ದಾರೆ. ಆದರೆ, ನೀವು ಚುನಾವಣೆಯಲ್ಲಿ ಗೆದ್ದು ಹೋದ ಮೇಲೆ ಇತ್ತ ಬಂದು ಜನರ ಸಮಸ್ಯೆ ಕೇಳಿಲ್ಲ ಎಂದು ಶಾಸಕರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡರು.

ADVERTISEMENT

ಘಟನೆಯಿಂದ ವಿಚಲಿತರಾದ ಶಾಸಕರು ಸ್ವಲ್ಪ ಸಮಯ ಕಾರಿನಲ್ಲೇ ಕುಳಿತರು. ನಂತರ ಮಹಿಳೆಯರನ್ನು ಸಮಾಧಾನ ಮಾಡಲು ಪ್ರಯತ್ನಿಸಿದರು. ‘ಮಳೆ ಬಾರದ ಕಾರಣ ಅಂತರ್ಜಲ ಬತ್ತಿದ್ದು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ’ ಎಂದು ಹೇಳಿದರು ಸಹ ಪ್ರತಿಭಟನಕಾರರು ಇವರ ಮಾತು ಕೇಳುವ ಸ್ಥಿತಿಯಲ್ಲಿರಲಿಲ್ಲ.

ಮತದಾನ ಬಹಿಪ್ಕಾರ: ಲೋಕಸಭೆ ಚುನಾವಣೆಯ ಮತದಾನಕ್ಕಿಂತ ಮುಂಚೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಮತದಾನ ಬಹಿಷ್ಕರಿಸಲಾಗುವುದು ಎಂದು ಮಹಿಳೆಯರು ಎಚ್ಚರಿಸಿದರು.

ತಕ್ಷಣ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಶಾಸಕರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.