ಲಖನೌ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವ ಬಗ್ಗೆ ಪರಿಶೀಲಿಸಬೇಕಾಗುತ್ತದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಎಚ್ಚರಿಕೆ ಕೊಟ್ಟಿದ್ದಾರೆ. ಮಧ್ಯಪ್ರದೇಶದ ಗುಣಾ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಲೋಕೇಂದ್ರ ಸಿಂಗ್ ಅವರು ಕಣದಿಂದ ಹಿಂದೆ ಸರಿದಿರುವುದು ಮಾಯಾವತಿ ಆಕ್ರೋಶಕ್ಕೆ ಕಾರಣ.
‘ಆಡಳಿತ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುವುದರಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಕಡಿಮೆಯೇನಲ್ಲ. ಗುಣಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಬಲವಂತ ಮಾಡಿದೆ. ತನ್ನದೇ ಚಿಹ್ನೆಯಲ್ಲಿ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ಗೆ ಬಿಎಸ್ಪಿ ಉತ್ತರ ನೀಡಲಿದೆ. ಜತೆಗೆ ಕಾಂಗ್ರೆಸ್ ಸರ್ಕಾರಕ್ಕೆ ಕೊಟ್ಟ ಬೆಂಬಲವನ್ನು ಮರುಪರಿಶೀಲಿಸಲಾಗುವುದು’ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ಗುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಜ್ಯೋತಿರಾದಿತ್ಯ ಸಿಂಧಿಯಾ ಸ್ಪರ್ಧಿಸುತ್ತಿದ್ದಾರೆ. ಅಲ್ಲಿ ಮೇ 12ರಂದು ಮತದಾನ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.