ಸಿದ್ದರಾಮಯ್ಯ, ಶಿವರಾಜ್ ಕುಮಾರ್
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಇಂದು ಎಕ್ಸ್ನಲ್ಲಿ ಸಿದ್ದರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
‘ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
'ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ. ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ' ಎಂದಿದ್ದಾರೆ.
'ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ' ಎಂದು ಹರಿಸಿದ್ದಾರೆ.
ಶಸ್ತ್ರಚಿಕಿತ್ಸೆಗಾಗಿ ಶಿವರಾಜ್ ಕುಮಾರ್ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಇದಕ್ಕಾಗಿ ಅವರು ಕನಿಷ್ಠ ಆರು ವಾರ ಅಮೆರಿಕದಲ್ಲಿರಲಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರೂ ಕರೆ ಮಾಡಿ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.