ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಲಿವುಡ್ ಸೂಪರ್ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲ್ಹಾಸನ್ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಕಮಲ್ ಹಾಸನ್ ಮಕ್ಕಳ್ ನೀದಿ ಮಯ್ಯಂ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ರಜನಿಕಾಂತ್ ಜನವರಿಯಲ್ಲಿ ತಮ್ಮ ಹೊಸ ರಾಜಕೀಯ ಪಕ್ಷವನ್ನು ಉದ್ಘಾಟನೆ ಮಾಡಲಿದ್ದಾರೆ.
ಸದ್ಯದ ಸುದ್ದಿಯ ಪ್ರಕಾರ ಖ್ಯಾತ ತಮಿಳು ನಟ ವಿಶಾಲ್ ಕೂಡ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಅವರು ತಮಿಳುನಾಡಿನ 234 ಕ್ಷೇತ್ರಗಳಲ್ಲಿ ಒಂದರಿಂದ ಸ್ಪರ್ಧಿಸಲಿದ್ದಾರೆ. ಇವರು ಈಗಾಗಲೇ ನಿರ್ಮಾಪಕರ ಸಂಘ ಮತ್ತು ನಾಡಿಗರ್ ಅಸೋಸಿಯೇಶನ್ ಚುನಾವಣೆಗಳಲ್ಲಿ ಸ್ಪರ್ಧಿಸಿ ಅಧ್ಯಕ್ಷ ಸ್ಥಾನವನ್ನು ಗೆದ್ದಿದ್ದಾರೆ.
ವಿಶಾಲ್ ಈ ಹಿಂದೆ ಆರ್.ಕೆ. ನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸಿದ್ದರು. ಆದರೆ ಕೆಲವು ಕಾರಣಗಳಿಂದ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಮುಂದಿನ ಚುನಾವಣೆಯಲ್ಲಿ ವಿಶಾಲ್ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಶೀಘ್ರದಲ್ಲೇ ಅಧಿಕೃತವಾಗಿ ಘೋಷಿಸಲಾಗುವುದು.
ಇನ್ನು ನಟನೆಯ ವಿಷಯಕ್ಕೆ ಬಂದರೆ ವಿಶಾಲ್ ಎಂ.ಎಸ್. ಆನಂದನ್ ನಿರ್ದೇಶನದ ಚಕ್ರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸೈಬರ್ ಅಪರಾಧ ಹಾಗೂ ಇ–ಕಾರ್ಮಸ್ ಸ್ಕ್ಯಾಮ್ ಆಧಾರಿತ ಈ ಸಿನಿಮಾದಲ್ಲಿ ಶೃದ್ಧಾ ಶ್ರೀನಾಥ್ ಹಾಗೂ ರೆಜಿನಾ ಕ್ಯಾತ್ಸಂದ್ರ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.