ನಟ ಅಜಯ್ ರಾವ್ ಚಂದನವನದ ಯುವ ನಿರ್ದೇಶಕನೊಂದಿಗೆ ತಮ್ಮ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಯುದ್ಧಕಾಂಡ’ ಎಂಬ ಶೀರ್ಷಿಕೆ ಇದೆ.
ಈ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಅವರು ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆ ಟೀಸರ್ನ್ನು ವಕೀಲರಿಂದಲೇ ಬಿಡುಗಡೆ ಮಾಡಿಸಿದರು.
ರವಿಚಂದ್ರನ್ ಅಭಿನಯ್ ‘ಯುದ್ಧಕಾಂಡ’ಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದರು ಅಜಯ್ ರಾವ್.
‘ಚಿತ್ರರಂಗ ಪ್ರವೇಶಿಸಿ 20 ವರ್ಷ ಆಯಿತು. ನಟನಾಗಿ ಯಶಸ್ಸು, ಸೋಲು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಮಾಡಿದ್ದೇನೆ. ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ’ ಎಂದರು ಅಜಯ್ ರಾವ್.
‘ಯುದ್ಧಕಾಂಡ’ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮೆರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.