
ಸತೀಶ್ ನೀನಾಸಂ, ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ‘ದಿ ರೈಸ್ ಆಫ್ ಅಶೋಕ’ ಚಿತ್ರದ ‘ಕಲ್ಯಾಣವೇ ಗೌರಿ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಿರ್ದೇಶಕ ವಿನೋದ್ ದೋಂಡಾಳೆ ಈ ಚಿತ್ರ ಪ್ರಾರಂಭಿಸಿದ್ದರು. ಅವರ ಅಕಾಲಿಕ ಮರಣದಿಂದ ಮನು ಶೆಡ್ಗಾರ್ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ.
ಹಾಡಿಗೆ ಪೂರ್ಣಚಂದ್ರ ತೇಜಸ್ವಿ ಸಂಗೀತವಿದ್ದು, ಪಂಚಮ್ ಜೀವ, ಶ್ವೇತಾ ಹಿರೇಮಠ ಧ್ವನಿಯಾಗಿದ್ದಾರೆ. ಜನಪದ ಗೀತೆಯ ಸಾಹಿತ್ಯ ಹೊಂದಿರುವ ಈ ಹಾಡಿನಲ್ಲಿ ನಾಯಕ ಮತ್ತು ನಾಯಕಿ ನಡುವಿನ ಮದುವೆ ಸನ್ನಿವೇಶಗಳನ್ನು ಕಟ್ಟಿಕೊಡಲಾಗಿದೆ.
ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾ ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ. ‘ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಆಲೋಚಿಸಿದ್ದೇವೆ. ಪ್ರಚಾರ ಕಾರ್ಯ ಪ್ರಾರಂಭಿಸಿದ್ದು, ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದಿದೆ ಚಿತ್ರತಂಡ.
70 ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾವಿದು. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆ ಇದಾಗಿದೆ.
ದಯಾನಂದ್ ಟಿ.ಕೆ ಕಥೆ ಬರೆದ್ದಾರೆ. ಲವಿತ್ ಛಾಯಾಚಿತ್ರಗ್ರಹಣ, ಮನು ಶೆಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.