ಬೆಂಗಳೂರು: ‘ಕೋವಿಡ್ ಕಾರಣದಿಂದ ರಾಜ್ಯ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭಕ್ಕೆ ₹ 2 ಕೋಟಿ ವೆಚ್ಚ ಮಾಡಲು ಮುಂದಾಗಿರುವುದು ಸರಿಯಲ್ಲ. ಇದನ್ನು ತಡೆಯಬೇಕು’ ಎಂದು ಆಗ್ರಹಿಸಿ ಮುಖ್ಯ ಕಾರ್ಯದರ್ಶಿಗೆ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಮೋಹನ್ಕುಮಾರ್ ಕೊಂಡಜ್ಜಿ ಪತ್ರ ಬರೆದಿದ್ದಾರೆ.
‘ಪ್ರತಿ ವರ್ಷ ನಡೆಯುವ ಚಿತ್ರೋತ್ಸವಕ್ಕೆ ₹ 5 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಅದರಲ್ಲಿ ₹ 2 ಕೋಟಿ ಉದ್ಘಾಟನೆ ಮತ್ತು ಸಮಾರೋಪಕ್ಕೆ ವೆಚ್ಚವಾಗುತ್ತದೆ ಎಂಬ ಮಾಹಿತಿ ಸಿಕ್ಕಿದೆ. ಈ ರೀತಿಯ ಅನಗತ್ಯ ವೆಚ್ಚ ‘ಸಿನಿಮಾ ಸಂಸ್ಕೃತಿ’ಯನ್ನು ಪ್ರೋತ್ಸಾಹಿಸದು. ಕೋವಿಡ್ ಮತ್ತು ಆರ್ಥಿಕ ಸಂಕಷ್ಟದ ಕಾರಣಕ್ಕೆ ಈ ವೆಚ್ಚಕ್ಕೆ ಕಡಿತಗೊಳಿಸುವಂತೆ ಮುಖ್ಯಮಂತ್ರಿಗೆ ಫೆ. 11ರಂದೇ ಪತ್ರ ಬರೆದಿದ್ದೇನೆ’ ಎಂದೂ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
‘ಚಲನಚಿತ್ರ ಅಕಾಡೆಮಿಯ ಸದಸ್ಯರು ಅಥವಾ ಈ ಕ್ಷೇತ್ರದ ಯಾವುದೇ ಸಂಸ್ಥೆಯ ಜೊತೆ ಸಮಾಲೋಚನೆ ನಡೆಸದೆ ಚಿತ್ರೋತ್ಸವದ ಉದ್ಘಾಟನೆ ಮತ್ತು ಸಮಾರೋಪ ಸೇರಿದಂತೆ ಎಲ್ಲ ಚಟುವಟಿಕೆಯನ್ನು ಆಯೋಜಿಸಲು ಡಿಎನ್ಎ ಎಂಬ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಗೆ ಹೊರ ಗುತ್ತಿಗೆ ನೀಡಲಾಗಿದೆ ಎಂದು ಗೊತ್ತಾಗಿದೆ. ಹೀಗಾಗಿ, ಈ ಬಗ್ಗೆ ತಕ್ಷಣ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದೂ ಪತ್ರದಲ್ಲಿ ಕೊಂಡಜ್ಜಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.