ಸಿಎಂ ಭೇಟಿ ಮಾಡಿದ ಡಾಲಿ–ಧನ್ಯತಾ
(ಚಿತ್ರ ಕೃಪೆ–@siddaramaiah)
ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಫೆ 16ರಂದು ಮದುವೆಗೆ ದಿನಾಂಕ ನಿಗದಿಯಾಗಿದ್ದು, ಲಗ್ನ ಪತ್ರಿಕೆಯ ಫೋಟೊವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಕೊಂಡಿದ್ದಾರೆ.
ಇಂದು ಡಾಲಿ ಹಾಗೂ ಧನ್ಯತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಲಗ್ನ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ.
ಇತ್ತೀಚೆಗೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಾಳೇನಹಳ್ಳಿಯಲ್ಲಿ ನಿಶ್ಚಿತಾರ್ಥ ನೆರವೇರಿತ್ತು.
ಸರಳ ಸಮಾರಂಭದಲ್ಲಿ ಕುಟುಂಬದ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು.
ದೀಪಾವಳಿ ಹಬ್ಬದ ವೇಳೆ ಡಾಲಿ ತಮ್ಮ ಮದುವೆ ವಿಚಾರ ಬಹಿರಂಗಪಡಿಸಿದ್ದರು.
ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.
ಡಾಲಿ–ಧನ್ಯತಾ
ಇನ್ನು ಮದುವೆ ಆಮಂತ್ರಣ ಪತ್ರಿಕೆಯನ್ನು ಕೂಡ ತುಂಬಾ ವಿಭಿನ್ನವಾಗಿ ಮಾಡಿಸಿದ್ದಾರೆ. ತಾವು ಎಲ್ಲಿದ್ದರೂ ಜಗದ ಯಾವ ಮೂಲೆಯಲ್ಲಿದ್ದರೂ ಕುಟುಂಬ ಸಮೇತರಾಗಿ ಬಂದು ನಮ್ಮ ಸಮಾಗಮಕ್ಕೆ ನೀವು ಆಶೀರ್ವಾದ ಮಾಡಬೇಕು. ಪ್ರೇಮದ ಭರವಸೆಯೇ ಬಾಳಿನ ಬೆಳಕು. ನಮ್ಮ ಪ್ರೀತಿ ದೀಪದ ಪ್ರಕಾಶಕ್ಕೆ ಸಾಕ್ಷಿಯಾಗಬೇಕು ಎಂಬುದು ನಮ್ಮ ಆಶಯ. ಮತ್ತೆಲ್ಲಾ ಕ್ಷೇಮವಷ್ಟೇ.. ನಿಮ್ಮನ್ನು ಸ್ವಾಗತಿಸುವ ನಿರೀಕ್ಷೆಯಲ್ಲಿ ಧನಂಜಯ-ಧನ್ಯತಾ ಎಂದು ಲಗ್ನ ಪತ್ರಿಕೆಯಲ್ಲಿ ಬರೆಯಲಾಗಿದೆ.
ಡಾಲಿ ಧನಂಜಯ ನಟ, ನಿರ್ಮಾಪಕ, ಗೀತ ಬರಹಗಾರರಾಗಿ ಗಮನ ಸೆಳೆಯುತ್ತಿದ್ದಾರೆ. ಧನ್ಯತಾ ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.