ಬೆಂಗಳೂರು: ಮಹಿಳಾ ವಕೀಲರೊಬ್ಬರಿಗೆ ಶ್ವಾನ ಕಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಬುಧವಾರ ವಿಚಾರಣೆಗೆ ಹಾಜರಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡು ಕಳುಹಿಸಿದರು ಎಂದು ಮೂಲಗಳು ತಿಳಿಸಿವೆ.
ಖುದ್ದು ವಿಚಾರಣೆಗೆ ಹಾಜರಾಗುವಂತೆ ನವೆಂಬರ್ 11ರಂದು ದರ್ಶನ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಿದ್ದರಿಂದ ವಿಚಾರಣೆಗೆ ಹಾಜರಾಗಿದ್ದರು ಎಂದು ಮೂಲಗಳು ತಿಳಿಸಿವೆ.
‘ಅ.28ರಂದು ಸ್ಪರ್ಶ ಆಸ್ಪತ್ರೆಯಲ್ಲಿ ಪಾರ್ಶ್ವವಾಯು ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಇಎಂಎಲ್ 5ನೇ ಹಂತದ ನಿವಾಸಿಯಾದ ಅಮಿತಾ ಜಿಂದಾಲ್ ಅವರು ಕಾರಿನಲ್ಲಿ ತೆರಳಿದ್ದರು. ದರ್ಶನ್ ಮನೆ ಎದುರಿನ ಖಾಲಿ ಪ್ರದೇಶದಲ್ಲಿ ತಮ್ಮ ಕಾರು ನಿಲುಗಡೆ ಮಾಡಿದ್ದರು. ದರ್ಶನ್ ಅವರ ಮನೆಯ ಶ್ವಾನಗಳು ದಾಳಿ ನಡೆಸಿ ಗಾಯಗೊಳಿಸಿದ್ದವು. ಘಟನೆ ಸಂಬಂಧ ಅಮಿತಾ ಅವರು ದೂರು ನೀಡಿದ್ದರು. ದರ್ಶನ್ ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು’
‘ದೂರಿನ ಅನ್ವಯ ಕಾನೂನು ಪ್ರಕ್ರಿಯೆ ನಡೆಸಲಾಗುತ್ತಿದೆ. ಘಟನೆ ನಡೆದ ಸಂದರ್ಭದ ಸಿಸಿ ಟಿವಿ ದೃಶ್ಯಾವಳಿಗಳು ಲಭ್ಯವಾಗಿಲ್ಲ. ಅದನ್ನು ನೀಡುವಂತೆ ದರ್ಶನ್ ಅವರಿಗೆ ತಿಳಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಶ್ವಾನ ನೋಡಿಕೊಳ್ಳುತ್ತಿದ್ದ ಯುವಕ ನನ್ನ ಅಭಿಮಾನಿ. ಆತನಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದೆ. ಆದರೆ, ಆತ ನಿರ್ಲಕ್ಷ್ಯ ವಹಿಸಿದ್ದರಿಂದ ಈ ಅಚಾತುರ್ಯವಾಗಿದೆ. ಮುಂದೆ ಈ ರೀತಿ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇನೆ. ಮನೆಯ ಸುತ್ತ ಹೊಸದಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು ಅದರ ದೃಶ್ಯಾವಳಿ ನೀಡುವುದಾಗಿ ದರ್ಶನ್ ವಿಚಾರಣೆ ವೇಳೆ ತಿಳಿಸಿದ್ದಾರೆ‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.