‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’ ಖ್ಯಾತಿಯ ನಿರ್ದೇಶಕ ಹೇಮಂತ್ ಎಂ. ರಾವ್ ಇದೀಗ ಮತ್ತೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ನಟ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘ಅಜ್ಞಾತವಾಸಿ’ ಸಿನಿಮಾ ಸೆಟ್ಟೇರಿದ್ದು, ಈ ಚಿತ್ರದ ಮುಖಾಂತರ ಹೇಮಂತ್ ಪೂರ್ಣ ಪ್ರಮಾಣದ ನಿರ್ಮಾಪಕರಾಗಿದ್ದಾರೆ.
ಈ ಹಿಂದೆ ಸಾದ್ ಖಾನ್ ನಿರ್ದೇಶನದ ‘ಹಂಬಲ್ ಪೊಲಿಟಿಷಿಯನ್ ನಾಗರಾಜ್’ ಸಿನಿಮಾದ ನಿರ್ಮಾಪಕರಲ್ಲಿ ಹೇಮಂತ್ ಒಬ್ಬರಾಗಿದ್ದರು.‘ಗುಲ್ಟು’ ಸಿನಿಮಾ ಖ್ಯಾತಿಯ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ, ‘ಅಜ್ಞಾತವಾಸಿ’ ಚಿತ್ರದ ಮುಹೂರ್ತ ಇತ್ತೀಚೆಗೆಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು. ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ ಅವರೂ ತಾರಾಗಣದಲ್ಲಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ಜನಾರ್ದನ್ ಚಿಕ್ಕಣ್ಣ, ‘ನನ್ನ ಗುರುಗಳಾದ ಕೃಷ್ಣರಾಜ್ ಅವರು ಈ ಚಿತ್ರದ ಕಥೆ ಬರೆದಿದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಇದೊಂದು ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಎನ್ನಬಹುದು. ರಂಗಾಯಣ ರಘು ಅವರು ಪೊಲೀಸ್ ಅಧಿಕಾರಿಯಾಗಿ ಈ ಚಿತ್ರದಲ್ಲಿ ನಟಿಸಲಿದ್ದಾರೆ.
ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ’ ಎಂದರು.
‘ಕಥೆ ಇಷ್ಟವಾಯಿತು. ರಂಗಾಯಣ ರಘು ಅವರ ಅಭಿನಯವನ್ನು ನೋಡಲು ನಾನು ನಿರ್ಮಾಪಕನಿಗಿಂತ ಹೆಚ್ಚಾಗಿ ಅಭಿಮಾನಿಯಾಗಿ ಕಾಯುತ್ತಿದ್ದೇನೆ’ ಎಂದರು ಹೇಮಂತ್. ಪ್ರಸ್ತುತ ನಟ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾವನ್ನು ಹೇಮಂತ್ ಅವರು ನಿರ್ದೇಶಿಸುತ್ತಿದ್ದು, ಈ ಚಿತ್ರ ವರ್ಷಾಂತ್ಯಕ್ಕೆ ತೆರೆಗೆ ಬರುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.