ADVERTISEMENT

ಭೂ ಸುಧಾರಣಾ ಕಾಯ್ದೆ: ಇದೊಂದು ದುಃಖದ ದಿನ; ನಟ ಚೇತನ್‌ ವಿಷಾದದ ನುಡಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 7:50 IST
Last Updated 9 ಡಿಸೆಂಬರ್ 2020, 7:50 IST
ಚೇತನ್‌
ಚೇತನ್‌   

ರಾಜ್ಯ ಸರ್ಕಾರ ಮಂಡಿಸಿದ ಭೂ ಸುಧಾರಣಾ ಕಾಯ್ದೆ (ಎರಡನೇ ತಿದ್ದುಪಡಿ)–2020 ಮಸೂದೆಯು ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಬೆಂಬಲದೊಂದಿಗೆ ಅಂಗೀಕಾರಗೊಂಡಿರುವುದಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್ ವಿಷಾದ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿಯ ‘ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ 2020’ ಇದು 450 ಎಕರೆ ಕೃಷಿ ಭೂಮಿಯನ್ನು ಖರೀದಿಸಲು ಯಾರಿಗಾದರೂ ಅವಕಾಶ ನೀಡುತ್ತದೆ. ಜೆಡಿಎಸ್‌ ಬೆಂಬಲದೊಂದಿಗೆ ನಿನ್ನೆ ವಿಧಾನಪರಿಷತ್‌ನಲ್ಲಿ ಅಂಗೀಕರಿಸಲಾಯಿತು. ದುಃಖದ ದಿನ’ ಎಂದು ಚೇತನ್‌ ಸಾಮಾಜಿಕ ಜಾಲತಾಣಗಳಲ್ಲಿ ವಿಷಾದಿಸಿದ್ದಾರೆ.

ರೈತರ ಹೋರಾಟಕ್ಕೆ ಬೆಂಬಲ ನೀಡದ ಚಿತ್ರ ನಟರ ವಿರುದ್ಧ ಮೊನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದ ಚೇತನ್‌, ‘ಕೇಂದ್ರ ಕೃಷಿ ಮಸೂದೆಯನ್ನು ಖಂಡಿಸಿ ರೈತರು ಕಳೆದ ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಚುನಾವಣಾ ಪ್ರಚಾರದ ಬ್ಯಾಂಡ್‌ವ್ಯಾಗನ್‌ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡ ಚಲನಚಿತ್ರ ನಟರು ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ. ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಅಥವಾ ನಮ್ಮ ಶ್ರೀಮಂತ ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ನಾವು ನಟರು ಮಾತ್ರ ಆಸಕ್ತಿ ಹೊಂದಿದ್ದೇವೆಯೇ? ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ADVERTISEMENT

ರಾಜಕಾರಣಿಗಳನ್ನು ಬೆಂಬಲಿಸಿ ಚುನಾವಣಾ ಪ್ರಚಾರ ನಡೆಸುವ ನಟ–ನಟಿಯರ ನಡೆಗೆ ಅವರು ಪರೋಕ್ಷವಾಗಿ ಟಾಂಗ್‌ ನೀಡಿದ್ದರು.

ರೈತ ಹೋರಾಟಕ್ಕೆ ಶಿವಣ್ಣ ಬೆಂಬಲ

ಸ್ಯಾಂಡಲ್‌ವುಡ್‌ನ ‘ಹ್ಯಾಟ್ರಿಕ್‌ ಹೀರೊ’ ಶಿವಣ್ಣ, ದೇಶದಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿದ್ದಾರೆ.

‘ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ .. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ..ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ’ ಎಂದು ಶಿವಣ್ಣ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.