ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆಯನ್ನು ಹೊಂದಿರುವ ‘ಶೇಷ 2016’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಪ್ರದೀಪ್ ಅರಸೀಕೆರೆ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮರಡಿಗುಡ್ಡ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಮಂಜುವಾಣಿ ವಿ.ಎಸ್. ಹಾಗೂ ವೀಣಾ. ಎಸ್. ಬಂಡವಾಳ ಹೂಡಿದ್ದಾರೆ.
‘ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಪೊಲೀಸ್ ಇಲಾಖೆಯಲ್ಲಿ ಕೆಲವು ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟ ಚಟುವಟಿಕೆಗಳ ಬಗ್ಗೆ ಚಿತ್ರ ಮಾಡಿದ್ದೇನೆ. ಸಾಮಾನ್ಯವಾಗಿ ಎಲ್ಲದಕ್ಕೂ ಒಂದೊಂದು ಪರ್ಯಾಯ ವ್ಯವಸ್ಥೆ ಇರುತ್ತದೆ. ಸರ್ಕಾರಿ ಆಸ್ಪತ್ರೆ, ಶಾಲೆ ಇಲ್ಲದಿದ್ದರೆ ಖಾಸಗಿ ಆಯ್ಕೆಗಳಿವೆ. ಆದರೆ ಪೊಲೀಸ್ ಇಲಾಖೆಗೆ ಬದಲಿ ವ್ಯವಸ್ಥೆ ಇಲ್ಲ. ಇಂಥ ಇಲಾಖೆಯಲ್ಲಿ ನಡೆಯುವ ಭ್ರಷ್ಟಾಚಾರದಿಂದ ಜನರು ಹೇಗೆ ಸಮಸ್ಯೆಗಳನ್ನು ಎದುರಿಸುತ್ತಾರೆ, ಅದನ್ನು ಹೇಗೆ ನಿಭಾಯಿಸುತ್ತಾರೆ ಎಂಬುದೇ ಚಿತ್ರದ ಕಥೆ. ಸೆನ್ಸಾರ್ ಆಗಿ ಬಿಡುಗಡೆಗೆ ಸಿದ್ಧವಿದೆ. ಜೂನ್ ವೇಳೆಗೆ ತೆರೆಗೆ ಬರಲಿದೆ’ ಎಂದರು ನಿರ್ದೇಶಕರು.
ಕನ್ನಡ ಹಾಗೂ ಮಲಯಾಳ ಭಾಷೆಗಳಲ್ಲಿ ಚಿತ್ರ ಮೂಡಿಬಂದಿದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ, ಆರ್.ಎಸ್.ಆನಂದ ಕುಮಾರ್ ಛಾಯಾಚಿತ್ರಗ್ರಹಣವಿದೆ. ಪ್ರಮೋದ್ ಶೆಟ್ಟಿ, ಅರ್ಚನಾ ಕೊಟ್ಟಿಗೆ ಪ್ರಮುಖ ಪಾತ್ರದಲ್ಲಿದ್ದಾರೆ. ಸಿದ್ಲಿಂಗು ಶ್ರೀಧರ್, ಸಾಯಿ ಭೈರವ ಮುಂತಾದವರು ತಾರಾಗಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.