ನೀನಾಸಂ ಸತೀಶ್, ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿರುವ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಡಬ್ಬಿಂಗ್ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ನಿರ್ದೇಶಕ ವಿನೋದ್ ದೋಂಡಾಳೆ ಈ ಚಿತ್ರ ಪ್ರಾರಂಭಿಸಿದ್ದರು. ಅವರ ಅಕಾಲಿಕ ಮರಣದಿಂದ ಮನು ಶೆಡ್ಗಾರ್ ನಿರ್ದೇಶಕನಾಗಿ ಚಿತ್ರವನ್ನು ಪೂರ್ಣಗೊಳಿಸಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ನೀನಾಸಂ ಸತೀಶ್ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ.
‘ಆಕಾಶ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಗಿಸಿದ್ದೇವೆ. ಇಲ್ಲಿ ಅಣ್ಣಾವ್ರು, ವಿಷ್ಣುವರ್ಧನ್ ಸೇರಿದಂತೆ ಹಲವರು ಡಬ್ ಮಾಡಿದ್ದಾರೆ. ಈ ಜಾಗದಲ್ಲಿ ನಮ್ಮ ಚಿತ್ರದ ಡಬ್ಬಿಂಗ್ ಮುಗಿದಿರುವುದು ಖುಷಿ ಇದೆ. ಕನ್ನಡ, ತೆಲುಗು ಹಾಗೂ ತಮಿಳ ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದೇವೆ. ಕನ್ನಡ ಭಾಷೆ ಡಬ್ಬಿಂಗ್ ಮುಗಿದಿದ್ದು, ಮುಂದಿನ ದಿನಗಳಲ್ಲಿ ತೆಲುಗು ಹಾಗೂ ತಮಿಳು ಶುರು ಮಾಡುತ್ತೇವೆ’ ಎಂದರು ಸತೀಶ್.
70ರ ದಶಕದಲ್ಲಿ ಹಾಗೂ ಪ್ರಸ್ತುತ ಕಾಲಘಟ್ಟದಲ್ಲಿ ನಡೆಯುವ ಸಿನಿಮಾವಿದು. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆ ಇದಾಗಿದೆ.
ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಛಾಯಾಚಿತ್ರಗ್ರಹಣ, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.