‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನೆಲ್ನಲ್ಲಿ ಬಿಡುಗಡೆಯಾಗಿದೆ.
‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ‘ಮಧುರ ಮಧುರ’ ಹಾಡನ್ನು ಅನಿಲ್ ಸಿ.ಜೆ. ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ. ಮಾಧುರ್ಯ ತುಂಬಿದ ಈ ಹಾಡನ್ನು ವಿಶೇಷವಾಗಿ ನಿರ್ಮಿಸಲಾಗಿರುವ ಸೆಟ್ನಲ್ಲಿ ಚಿತ್ರೀಕರಣ ಮಾಡುವುದರ ಜೊತೆಗೆ, ಕುಮಟದ ಸುಂದರ ಪರಿಸರದಲ್ಲಿ ಸೆರೆ ಹಿಡಿಯಲಾಗಿದೆ.
ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದು ಬಿಡುಗಡೆಗೆ ಸಜ್ಜಾಗುತ್ತಿರುವ ‘ಕಡಲ ತೀರದ ಭಾರ್ಗವ’ ಚಿತ್ರದ ಪ್ರಚಾರ ಆರಂಭವಾಗಿದೆ. ಕಳೆದ ವರ್ಷ ಚಿತ್ರದ ‘ಸಮಯವೇ’ ಎಂಬ ಲಿರಿಕಲ್ ವೀಡಿಯೋ ಬಿಡುಗಡೆಯಾಗಿತ್ತು. ಈಗ ‘ಮಧುರ ಮಧುರ’ ಚಿತ್ರದ ವೀಡಿಯೋ ಹಾಡು ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಹಾಡುಗಳು ಮತ್ತು ಟ್ರೈಲರ್ ಬಿಡುಗಡೆಯಾಗಲಿದೆ.
‘ಕಡಲತೀರದ ಭಾರ್ಗವ’ ಚಿತ್ರದ ಹಿಂದೆ ಉತ್ಸಾಹಿ ಯುವಕರ ತಂಡವಿದ್ದು, ಈ ಚಿತ್ರವನ್ನು ಎವ ಕಲಾ ಸ್ಟುಡಿಯೋಸ್ ಅಡಿ ವರುಣ್ ರಾಜು ಮತ್ತು ಭರತ್ ಗೌಡ ಜಂಟಿಯಾಗಿ ನಿರ್ಮಿಸಿದ್ದಾರೆ. ಭರತ್ ಗೌಡ, ಶ್ರುತಿ ಪ್ರಕಾಶ್, ವರುಣ್ ರಾಜು, ರಾಘವ್ ನಾಗ್, ಕೆ.ಎಸ್. ಶ್ರೀಧರ್, ಅಶ್ವಿನ್ ಹಾಸನ್ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅನಿಲ್ ಸಿ.ಜೆ. ಅವರ ಸಂಗೀತ ಮತ್ತು ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.