ಎಸ್.ನಾರಾಯಣ್ ನಿರ್ದೇಶಿಸಿ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಾರುತ’ ಚಿತ್ರದ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.
ಎಸ್.ನಾರಾಯಣ್ ಅವರೇ ಸಂಗೀತ ನೀಡಿದ್ದು, ಅನನ್ಯ ಭಟ್ ಅವರ ಗಾಯನದಲ್ಲಿ ಮೂಡಿ ಬಂದಿರುವ ಈ ಹಾಡಿನಲ್ಲಿ ನಾಯಕಿ ಬೃಂದಾ ಆಚಾರ್ಯ ಅಭಿನಯಿಸಿದ್ದಾರೆ. ಚಿತ್ರವನ್ನು ಕೆ.ಮಂಜು, ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ.
‘ರೈಲಿಗೆ ಎಂಜಿನ್ ಹೇಗೆ ಮುಖ್ಯವೊ ಹಾಗೆ ನಮ್ಮ ಚಿತ್ರದ ಬಹುಮುಖ್ಯ ಪಾತ್ರಕ್ಕೆ ಪ್ರಮುಖ ಕಲಾವಿದರೊಬ್ಬರು ಬೇಕಾಗಿತ್ತು. ಆ ಪಾತ್ರದಲ್ಲಿ ದುನಿಯಾ ವಿಜಯ್ ಅಭಿನಯಿಸಿದ್ದಾರೆ. ನೋಡುಗರಿಗೆ ಬೇಕಾಗಿರುವ ಎಲ್ಲಾ ಅಂಶಗಳನ್ನೊಳಗೊಂಡ ಒಂದು ಕೌಟುಂಬಿಕ ಚಿತ್ರ. ಯುವಜನತೆಗೆ ಎಚ್ಚರಿಕೆ ನೀಡುವ ಉತ್ತಮ ಸಂದೇಶ ಕೂಡ ಇದೆ. ಸಾಮಾಜಿಕ ಜಾಲತಾಣಗಳಿಂದ ಎಷ್ಟು ಉಪಯೋಗವಿದೆಯೋ, ಅದಕ್ಕಿಂತ ಹೆಚ್ಚು ಅಪಾಯವಿದೆ. ಈ ನಿಟ್ಟಿನಲ್ಲಿ ಪೋಷಕರು ಯುವಜನತೆಯ ಮೇಲೆ ಹೆಚ್ಚು ಗಮನ ನೀಡಬೇಕು ಎಂಬ ಸಂದೇಶವಿದೆ. ಅಕ್ಟೋಬರ್ 31ಕ್ಕೆ ಚಿತ್ರ ತೆರೆಗೆ ಬರಲಿದೆ’ ಎಂದು ನಿರ್ದೇಶಕ ಎಸ್ ನಾರಾಯಣ್ ತಿಳಿಸಿದರು.
ಶ್ರೇಯಸ್ ಮಂಜುಗೆ ಬೃಂದಾ ಆಚಾರ್ಯ ಜೋಡಿಯಾಗಿದ್ದಾರೆ. ಇನ್ನೂ ನಮ್ಮ ಚಿತ್ರದಲ್ಲಿ ತಾರಾ, ರಂಗಾಯಣ ರಘು, ಸಾಧು ಕೋಕಿಲ, ಕಲ್ಯಾಣಿ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಸುಜಯ್ ಶಾಸ್ತ್ರಿ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಅತಿಥಿಪಾತ್ರದಲ್ಲಿ ಅಭಿನಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.