ADVERTISEMENT

ರಕ್ತದೊತ್ತಡದಲ್ಲಿ ತೀವ್ರ ಏರುಪೇರು: ನಟ ರಜನಿಕಾಂತ್‌ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 9:18 IST
Last Updated 25 ಡಿಸೆಂಬರ್ 2020, 9:18 IST
ರಜನಿಕಾಂತ್
ರಜನಿಕಾಂತ್   

ಹೈದರಾಬಾದ್‌: ಅನಾರೋಗ್ಯದ ಹಿನ್ನೆಲೆಯಲ್ಲಿ ನಟ ರಜನಿಕಾಂತ್‌ ಅವರು ಹೈದರಾಬಾದ್‌ನ ಅಪೋಲೋಆಸ್ಪತ್ರೆಗೆ ದಾಖಲಾಗಿದ್ದಾರೆ.

'ರಜನಿಕಾಂತ್ ಅವರು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ 10 ದಿನಗಳಿಂದ ಚಿತ್ರವೊಂದರ ಶೂಟಿಂಗ್‌ಗಾಗಿ ಹೈದರಾಬಾದ್‌ನಲ್ಲಿ ಉಳಿದುಕೊಂಡಿದ್ದರು. ಶೂಟಿಂಗ್‌ ಸೆಟ್‌ನಲ್ಲಿದ್ದ ಕೆಲವರಿಗೆ ಕೋವಿಡ್‌ ಇರುವುದು ಪತ್ತೆಯಾಗಿತ್ತು. ಡಿಸೆಂಬರ್ 22ರಂದು ರಜನಿಕಾಂತ್‌ ಅವರಿಗೆ ಕೋವಿಡ್‌ ಪರೀಕ್ಷೆ ಮಾಡಲಾಗಿದೆ. ಆದರೆ, ಅವರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿರಲಿಲ್ಲ' ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ.

'ಕೋವಿಡ್‌ನ ಯಾವುದೇ ಲಕ್ಷಣಗಳು ಅವರಲ್ಲಿ ಕಂಡಬಂದಿಲ್ಲ. ಆದರೆ, ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿದೆ. ಆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡದಲ್ಲಿ ಏರುಪೇರು ಕಾಣಿಸಿಕೊಂಡದ್ದನ್ನು ಹೊರತುಪಡಿಸಿದರೆ, ಅವರಿಗೆ ಬೇರೆ ಯಾವುದೇ ಖಾಯಿಲೆಯ ಲಕ್ಷಣಗಳಿಲ್ಲ. ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ' ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ADVERTISEMENT

ರಜನಿಕಾಂತ್ ಅಭಿನಯದ ‘ಅಣ್ಣಾತೆ’ ಸಿನಿಮಾದ ಶೂಟಿಂಗ್ ಹೈದರಾಬಾದ್‌ನಲ್ಲಿ ನಡೆಯುತ್ತಿತ್ತು. ಸಿನಿಮಾ ಸೆಟ್‌ನಲ್ಲಿ 4 ಮಂದಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಬುಧವಾರ ಶೂಟಿಂಗ್‌ ಅನ್ನು ನಿಲ್ಲಿಸಲಾಗಿತ್ತು. ಈ ವಿಷಯವನ್ನು ಅಣ್ಣಾತೆ ನಿರ್ಮಾಣ ಸಂಸ್ಥೆಯಾದ ಸನ್ ಪಿಕ್ಚರ್ಸ್ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿತ್ತು.

2021ರ ಜನವರಿಯಲ್ಲಿ ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ‌ ರಜನಿಕಾಂತ್‌ ಅವರು ಡಿಸೆಂಬರ್‌ನ‌ ಮೊದಲ ವಾರದಲ್ಲಿತಿಳಿಸಿದ್ದಾರೆ

2021ರಲ್ಲಿ ನಡೆಯಲಿರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿ, ಜನರ ಭಾರಿ ಬೆಂಬಲದೊಂದಿಗೆ ಗೆಲುವನ್ನು ಸಾಧಿಸಲಿದೆ ಎಂದು ರಜನಿಕಾಂತ್‌ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2021 ಏಪ್ರಿಲ್‌– ಮೇ ತಿಂಗಳಲ್ಲಿ ತಮಿಳುನಾಡು ವಿಧಾನಭೆಗಾಗಿ ಚುನಾವಣೆ ನಡೆಯಲಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.