‘ಜಟ್ಟ’, ‘ಮೈತ್ರಿ’ ಚಿತ್ರದ ನಿರ್ದೇಶಕ ಬಿ.ಎಂ. ಗಿರಿರಾಜ್ ನಿರ್ದೇಶನದ ಹೊಸ ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ರಾಮರಸ’ ಎಂಬ ಟೈಟಲ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.
ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ರಾಮರಸ’ ಹಾರಾರ್ ಕಾಮಿಡಿ ಜಾನರ್ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ ಎಂದಿದ್ದಾರೆ ಬಿ.ಎಂ. ಗಿರಿರಾಜ್.
‘2008ರಲ್ಲಿ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ನಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದಾಗಿದೆ. ಕನ್ನಡದ ಖ್ಯಾತ ನಟರೊಬ್ಬರು ಈ ಸಿನಿಮಾದಲ್ಲಿ ನಟಿಸುತ್ತಿದ್ದು, ಅವರೊಂದಿಗೆ ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಬಿ.ಜೆ.ಭರತ್ ಈಗಾಗಲೇ ‘ರಾಮರಸ’ದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್ ಆರ್ಯ ಹಾಡುಗಳನ್ನು ಬರೆದಿದ್ದಾರೆ’ ಎಂದು ಮಾಹಿತಿ ನೀಡಿದರು ಗುರು ದೇಶಪಾಂಡೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.