ಬೆಂಗಳೂರು: ಚಿತ್ರಮಂದಿರ ಶೇ.50ರಷ್ಟು ಮಿತಿ ಆದೇಶವನ್ನು ರಾಜ್ಯ ಸರ್ಕಾರ ಸದ್ಯಕ್ಕೆ ಹಿಂತೆಗೆದುಕೊಂಡಿದೆ.
ಏಪ್ರಿಲ್ 7ರವರೆಗೆ ಶೇ 100ರಷ್ಟು ಸೀಟುಗಳ ಭರ್ತಿಗೆ ಅವಕಾಶ ನೀಡಲಾಗಿದೆ. ಏ.7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ಇರುತ್ತದೆ ಎಂದು ಸರ್ಕಾರ ಮರು ಆದೇಶ ಹೊರಡಿಸಿದೆ.
ಕೋವಿಡ್–19 ನಿಯಂತ್ರಣಕ್ಕಾಗಿ ರಾಜ್ಯದ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಗರಿಷ್ಠ ಶೇ 50 ಪ್ರೇಕ್ಷಕರಿಗಷ್ಟೇ ಅವಕಾಶ ನೀಡುವುದಾಗಿ ಶುಕ್ರವಾರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿತ್ತು.
ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.
‘ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಸಂಖ್ಯೆಯನ್ನು ಶೇ 50 ನಿರ್ಬಂಧಿಸಿರುವುದನ್ನು ರದ್ದುಗೊಳಿಸಿ. ಪೂರ್ಣ ಪ್ರಮಾಣದಲ್ಲಿ ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡಿ’ ಎಂದು ನಟ ಪುನೀತ್ ರಾಜ್ಕುಮಾರ್ ಅವರು ಸರ್ಕಾರಕ್ಕೆ ಆಗ್ರಹಿಸಿದ್ದರು.
‘ಜನರು ಕುಟುಂಬ ಸಮೇತರಾಗಿ ಬಂದು ಚಿತ್ರಗಳನ್ನು ನೋಡುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ಸುರಕ್ಷತೆಯನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿನಿಮಾ ಇಷ್ಟೊಂದು ಚೆನ್ನಾಗಿ ನಡೆಯುತ್ತಿರುವಾಗ ಈ ನಿರ್ಬಂಧ ಸೂಕ್ತವಲ್ಲ’ ಎಂದು ನಿರ್ದೇಶಕ ಸಂತೋಷ್ ಆನಂದರಾಮ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.