ಯಲಹಂಕ ಸಮೀಪದ ವೆಂಕಟಾಲ ಗ್ರಾಮದಲ್ಲಿ ಅಭಯ ಮಹಾಗಣಪತಿ ದೇವಾಲಯದ 6ನೇ ವಾರ್ಷಿಕೋತ್ಸವದ ಅಂಗವಾಗಿ ನ. 3 ಮತ್ತು 4ರಂದು (ಶನಿವಾರ–ಭಾನುವಾರ) ಕಡಲೆಕಾಯಿ ಪರಿಷೆಯನ್ನು ಏರ್ಪಡಿಸಲಾಗಿದೆ.
ಶನಿವಾರ ಬೆಳಿಗ್ಗೆ ಗಣಪತಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ನಂತರ ದೇವಾಲಯದ ಅಕ್ಕಪಕ್ಕದ ಬೀದಿಗಳಲ್ಲಿ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗುತ್ತದೆ.
ನಮ್ಮ ಸಂಸ್ಕೃತಿ, ಪರಂಪರೆ, ಹಬ್ಬಗಳು ಹಾಗೂ ಗ್ರಾಮೀಣ ಸೊಗಡಿನ ಪರಿಷೆಗಳ ಬಗ್ಗೆ ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ 6 ವರ್ಷಗಳಿಂದ ಕಡಲೆಕಾಯಿ ಪರಿಷೆ ಆಯೋಜಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೆಂಪೇಗೌಡ ತಿಳಿಸಿದರು.
ಈಗಾಗಲೇ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ, ವಿಜಯಪುರ, ಯಶವಂತಪುರ ಮಂಡಿಗಳಿಗೆ ತೆರಳಿ ವರ್ತಕರನ್ನು ಭೇಟಿ ನೀಡಿ, ಪರಿಷೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದ್ದು, ಈ ಸಲ 100ಕ್ಕೂ ಹೆಚ್ಚು ವ್ಯಾಪಾರಿಗಳು ಆಗಮಿಸಬಹುದೆಂದು ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ವಸ್ತುಗಳು, ತಿಂಡಿ-ತಿನಿಸುಗಳು. ಮಕ್ಕಳ ಆಟಿಕೆಗಳು ಸೇರಿದಂತೆ ವಿವಿಧ ಮಳಿಗೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಪ್ರೋತ್ಸಾಹಧನ: ಎರಡು ದಿನಗಳ ಪರಿಷೆಯಲ್ಲಿ ಪಾಲ್ಗೊಳ್ಳಲಿರುವ ವ್ಯಾಪಾರಿಗಳಿಗೆ ಕಾಫಿ, ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಪರಿಷೆಯಲ್ಲಿ ಕಡಲೆಕಾಯಿಯನ್ನು ರಾಶಿ ಹಾಕಿ ವ್ಯಾಪಾರ ಮಾಡುವ ಪ್ರತಿಯೊಬ್ಬರಿಗೂ ₹ 500 ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು. ಮಾಹಿತಿಗಾಗಿ-99801 96440
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.