
ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಗಳು ನಾಳೆ (ಫೆ.12) 'ಭಾರತ ಬಂದ್'ಗೆ ಕರೆ ನೀಡಿವೆ. ಪರಿಣಾಮವಾಗಿ ಬ್ಯಾಂಕಿಂಗ್, ಸಾರಿಗೆ ಹಾಗೂ ಇತರ ಕೆಲವು ಸೇವೆಗಳಿಗೆ ಗುರುವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ.
ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ಈ ಬಂದ್ಗೆ ಕರೆ ನೀಡಲಾಗಿದೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್ಜೀತ್ ಕೌರ್ ಹೇಳಿದ್ದಾರೆ. ಮುಷ್ಕರವು ದೇಶದಾದ್ಯಂತ 600 ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾದ(SKM) ಸಂಪೂರ್ಣ ಬೆಂಬಲದೊಂದಿಗೆ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್ಟಿಯುಸಿ), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ), ಹಿಂದ್ ಮಜ್ದೂರ್ ಸಭಾ (ಎಚ್ಎಂಎಸ್), ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ ಸೇರಿದಂತೆ 10 ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ಪ್ರಮುಖವಾಗಿ, ಕಳೆದ ವರ್ಷ (2025ರ ನವೆಂಬರ್) ಜಾರಿಗೆ ತಂದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಈ ಬಂದ್ಗೆ ಕರೆ ನೀಡಲಾಗಿದೆ. ಜತೆಗೆ ಬಿತ್ತನೆ ಬೀಜಗಳ ಮಸೂದೆ–2025, ವಿದ್ಯುತ್ ತಿದ್ದುಪಡಿ ಮಸೂದೆ ಮತ್ತು ಪರಮಾಣು ಶಕ್ತಿಯ ಸುಸ್ಥಿರ ಬಳಕೆ ಹಾಗೂ ಪ್ರಗತಿ ನಿಟ್ಟಿನಲ್ಲಿ ಭಾರತ ಪರಿವರ್ತನೆ (ಶಾಂತಿ) ಮಸೂದೆಯನ್ನು ಹಿಂಪಡೆಯಬೇಕು ಎಂಬ ಬೇಡಿಕೆಗಳು ಸೇರಿವೆ.
ಅಲ್ಲದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಮರುಸ್ಥಾಪನೆ, ವಿಕ್ಷಿಸಿತ ಭಾರತ - ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ 2025 ರದ್ದತಿ ಮತ್ತು ಭಾರತ- ಅಮೆರಿಕ ನಡುವಿನ ಪ್ರಸ್ತಾವಿತ ವ್ಯಾಪಾರ ಒಪ್ಪಂದ ರದ್ದುಗೊಳಿಸುವಂತೆಯೂ ಬೇಡಿಕೆಯಿಟ್ಟಿವೆ.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಷ್ಕರದ ಪರಿಣಾಮ:
ವರದಿಗಳ ಪ್ರಕಾರ, ಒಡಿಶಾ ಮತ್ತು ಅಸ್ಸಾಂ ಸಂಪೂರ್ಣ ಬಂದ್ ಆಗಲಿದೆ. ಇತರ ರಾಜ್ಯಗಳ ಮೇಲೂ ಮುಷ್ಕರದ ಪರಿಣಾಮ ಬೀರಲಿದೆ ಎಂದು ಕೌರ್ ಹೇಳಿದ್ದಾರೆ.
ದೇಶದಾದ್ಯಂತ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಬಂದಿಲ್ಲ. ಆದಾಗ್ಯೂ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ, ಶಿಕ್ಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಬಂದ್ಗೆ ತಮ್ಮ ಬೆಂಬಲ ಘೋಷಿಸಿವೆ. ಆಗಾಗಿ ಇಲ್ಲಿ ಶಾಲಾ– ಕಾಲೇಜುಗಳು ಮುಚ್ಚವ ಸಾಧ್ಯತೆಯಿದೆ. ಅದೇ ರೀತಿ, ಸ್ಥಳೀಯ ಸಂಸ್ಥೆಗಳು ಬಂದ್ಗೆ ಬೆಂಬಲ ನೀಡಿದರೆ ಇತರ ರಾಜ್ಯಗಳ ಮೇಲೂ ಪರಿಣಾಮ ಬೀರಬಹುದು ಎಂದು ವರದಿಯಾಗಿದೆ.
ಪ್ರತಿಭಟನೆ ಮತ್ತು ಸಂಭವನೀಯ ರಸ್ತೆ ತಡೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಸಹ ವ್ಯತ್ಯಯಗೊಳ್ಳಬಹುದು. ಜತೆಗೆ ಮಾರುಕಟ್ಟೆ, ಅಂಗಡಿಗಳು ಮತ್ತು ರೆಸ್ಟೋರೆಂಟ್ಗಳು ಸಹ ಮುಚ್ಚಲ್ಪಡಬಹುದು.
ಬ್ಯಾಂಕಿಂಗ್ ಸೇವೆಗಳ ಮೇಲೆ ಬಂದ್ ಬಿಸಿ ತಟ್ಟುವ ಸಾಧ್ಯತೆಯಿದೆ.ಬ್ಯಾಂಕ್ ಆಫ್ ಬರೋಡಾ, ಎಸ್ಬಿಐ, ಪಿಎನ್ಬಿ ಮತ್ತು ಇನ್ನೂ ಅನೇಕ ಬ್ಯಾಂಕುಗಳು ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಏನೆಲ್ಲಾ ಸೇವೆ ಲಭ್ಯ?
ಆಸ್ಪತ್ರೆ ಮತ್ತು ಆಂಬುಲೆನ್ಸ್ ಸೇವೆಗಳು
ವಿಮಾನ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಎಟಿಎಂ ಮತ್ತು ಆನ್ಲೈನ್ ಬ್ಯಾಂಕಿಂಗ್ ಸೇವೆ ಲಭ್ಯವಿರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.