ಕಲಬುರಗಿ: ‘ಕಲ್ಯಾಣ ಕರ್ನಾಟಕದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ವರ್ಷಪೂರ್ತಿ ನಡೆಯುವ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡುವರು’ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು.
ಅಂದು ಬೆಳಿಗ್ಗೆ 8.30ಕ್ಕೆ ಎಸ್ವಿಪಿ ವೃತ್ತದಲ್ಲಿನ ಸರ್ದಾರ ವಲ್ಲಭಭಾಯ್ ಪಟೇಲ್ ಅವರು ಮೂರ್ತಿಗೆ ಮುಖ್ಯ ಮಂತ್ರಿ ಮಾರ್ಲಾಪಣೆ ಮಾಡುವರು. 9ಕ್ಕೆ ಪೊಲೀಸ್ ಪರೆಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, 10.30ಕ್ಕೆ ಎನ್.ವಿ ಕಾಲೇಜು ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಜತೆಗೆ ವಿವಿಧ ಯೋಜನೆಗಳ ಫಲಾನುಭವಿಗಳ ಉದ್ದೇಶಿಸಿ ಮಾತನಾಡುವರು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ್ ನಿರಾಣಿ, ತೋಟಗಾರಿಕೆ ಸಚಿವ ಮುನಿರತ್ನ ಸೇರಿದಂತೆ ಹಲವರು ಪಾಲ್ಗೊಳ್ಳುವರು. ಮುಂದಿನ ತಿಂಗಳು ಆರೋಗ್ಯ ಶಿಬಿರ ನಡೆಯಲಿದೆ. ಡಿಸೆಂಬರ್ನಲ್ಲಿ ಉದ್ಯೋಗ ಮೇಳ ಆಯೋಜಿಸ ಲಾಗುವುದು’ ಎಂದರು.
‘ಕಲಬುರಗಿ ಕೋಟೆ ಅಭಿವೃದ್ಧಿಗೆ ₹20 ಕೋಟಿ ಅನುದಾನ ಮಂಜೂ ರಾಗಿದೆ. ಕೋಟೆಯ ನಿವಾಸಿಗಳನ್ನು ಸ್ಥಳಾಂತರಿಸುವ ಸಂಬಂಧ ಜಿಲ್ಲಾಧಿಕಾರಿ\ ಮಾತುಕತೆ ನಡೆಸುತ್ತಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲಾಗುವುದು. ಪರಿಸರ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳ ಅನುಸಾರ ಅಪ್ಪನ ಕೆರೆ ಬಳಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಇದರಿಂದ ನೀರಿನ ಸಂಗ್ರಹದಲ್ಲಿ ಕಡಿಮೆ ಆಗುವುದಿಲ್ಲ’ ಎಂದು ಅವರು ಸ್ಪಷ್ಟನೆ ನೀಡಿದರು.
‘ಅನಗತ್ಯ ಆರೋಪ’: ಎಂಎಸ್ಕೆ ಮಿಲ್ನ ವಾಣಿಜ್ಯ ನಿವೇಶನ ಮಾರಾಟ ದಲ್ಲಿ ಪ್ರಭಾವ ಬೀರಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ರಾಜಕೀಯ ಬೆಳವಣಿಗೆ ಸಹಿಸದೆ ಕೆಲವರು ಅನಗತ್ಯ ಆರೋಪ ಮಾಡುತ್ತಿದ್ದಾರೆ. ನನ್ನ ಸಹೋದರಿಗೆ ಸಂಬಂಧಿಸಿದ ವಿಷಯದಲ್ಲಿ ನನ್ನ ಹೆಸರು ಸಿಲುಕಿಸುತ್ತಿದ್ದಾರೆ. ಎಲ್ಲರಿಗೂ ಅವರದೆ ಯಾದ ಸ್ವಾತಂತ್ರ್ಯ ಇರುತ್ತದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲು ಹೋಗು ವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.
ಸ್ಥಬ್ಧಚಿತ್ರ ಪ್ರದರ್ಶನ: ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಚಿತ್ರಣ ನೀಡುವ ಸ್ಥಬ್ಧಚಿತ್ರಗಳ ಪ್ರದರ್ಶನ ಸಹ ನಡೆಯಲಿದೆ.
ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಸೆ. 15 ರಿಂದ 17ರ ವರೆಗೆ ಕಲ್ಯಾಣ ಕರ್ನಾಟಕದ ಅತಿದೊಡ್ಡ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಆಯಾ ಜಿಲ್ಲೆಗಳ ಭೌಗೋಳಿಕ ಮತ್ತು ಸ್ಥಳೀಯವಾಗಿ ಮಹತ್ವ ಪಡೆದಿರುವ ವಸ್ತುಗಳನ್ನು ಇಲ್ಲಿ ಮಾರಾಟ ಮಾಡಲಾಗುತ್ತಿದ್ದು, ಮಾರಾಟ ಮೇಳವು ಬೆಳಿಗ್ಗೆ 10 ರಿಂದ ರಾತ್ರಿ 10 ರವರೆಗೆ ತೆರೆಯಲಿದೆ. ಸರ್ಕಾರಿ ಮತ್ತು ಖಾಸಗಿಯ ಸುಮಾರು 200ಕ್ಕೂ ಹೆಚ್ಚು ಮಳಿಗೆಗಳು ಹಾಕಲಾಗುತ್ತಿದೆ.
ಮೂರು ದಿನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಕಲಬುರಗಿ, ಬೀದರ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಕೈಗಾರಿಕೆಗಳು, ಸಂಘ-ಸಂಸ್ಥೆಗಳು, ಮಹಿಳಾ ಸ್ವ-ಸಹಾಯ ಗುಂಪುಗಳು, ಗುಡಿ ಕೈಗಾರಿಕೆಗಳು, ಗೃಹ ಉದ್ಯಮಗಳು, ಕುಶಲಕರ್ಮಿಗಳು ಸ್ಥಳೀಯವಾಗಿ ಉತ್ಪಾದಿಸಲಾಗುವ ಗೃಹ ಉತ್ಪನ್ನ, ಗುಡಿ ಕೈಗಾರಿಕೆ ವಸ್ತುಗಳು, ಕರ ಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.