ADVERTISEMENT

ಪ್ರವಾಸ: ಹೊಸಗುಂದ ಎಂಬ ಹಳೆ ಕಥೆಗಳ ಬೀಡು

ಶ್ರೀಧರ ಭಟ್ಟ ಐನಕೈ
Published 6 ಜೂನ್ 2021, 2:04 IST
Last Updated 6 ಜೂನ್ 2021, 2:04 IST
ಹಾಸುಗಲ್ಲಿನ ಮೇಲೆ ಅರಳಿ ನಿಂತ 18 ಕಂಬಗಳ ನವರಂಗ
ಹಾಸುಗಲ್ಲಿನ ಮೇಲೆ ಅರಳಿ ನಿಂತ 18 ಕಂಬಗಳ ನವರಂಗ   

ಹೂ ಅರಳುವ ಹೊತ್ತು. ಮಲಗಲು ಹೋದ ರವಿ ಇನ್ನೂ ಎದ್ದಿರಲಿಲ್ಲ. ಒಮ್ನಿಯ ಲಾಟೀನು ಬೆಳಕನು ಮುಂದ್ಹಾಯಿಸಿ ಮಂಜಿನ ಪರದೆ ಸೀಳಿ ನಮ್ಮ ವಾಹನ ಸಾಗರ ತಾಲ್ಲೂಕಿನ ಆನಂದಪುರದ ಸನಿಹದ ಹೊಸಗುಂದದತ್ತ ಧಾವಿಸುತಲಿತ್ತು. ಗೂಗಲ್ ಗುರುವಿಗೆ ಸಹಾಯಕ್ಕಾಗಿ ಪದೇ ಪದೇ ಯಾಚಿಸಿದರೂ ನಿಮ್ಮ ಮೊಬೈಲ್ ನೆಟ್‍ವರ್ಕ್ ಕ್ಷೇತ್ರದಲ್ಲಿಲ್ಲವೆಂದು ಸಂದೇಶ ತೋರಿಸುತ್ತಾ ಮುಷ್ಕರ ಹೂಡಿತ್ತು. ಆನಂದಪುರದಲಿ ಎಡಕ್ಕೆ ಹಾಯ್ದು, ಆಕಾಶಕ್ಕೆ ಚಪ್ಪರ ಹಾಸಿದ ಮರಗಳ ನಡುವೆ ಹುದುಗಿದ ಹೊಸಗುಂದವೆಂಬ ಹೊಸಲೋಕವನ್ನು ಹಳೇ ಒಮ್ನಿ ಕಾರಿನಲ್ಲೇ ತಲುಪಿಕೊಂಡೆವು.

ಹೊಸನಗರದಿಂದ ಉತ್ತರಾಭಿಮುಖವಾಗಿ ಹೊರಟು ಆನಂದಪುರದಲ್ಲಿ ಎಡಕ್ಕೆ ಹೊರಳಿದರೆ ಹೊಸಗುಂದದ ದೇವಾಲಯಗಳ ಹೆಬ್ಬಾಗಿಲಿಗೆ ಬಂದು ಬೀಳುತ್ತೀರಿ. ಅಲ್ಲಿಂದ ಕೇವಲ 12 ಕಿಲೊಮೀಟರ್. ಸುತ್ತಲೂ ಆವರಿಸಿದ ಭತ್ತದ ಬಯಲು. ಊರಿಗೆ ಹೊಸಗುಂದ ಹೆಸರು ಹೇಗೆ ಬಂತೆಂದು ಇಲ್ಲಿನವರಿಗಿನ್ನೂ ಗೊತ್ತಿಲ್ಲ. ಮನಸೆಳೆವ ಆಕರ್ಷಕ ಶೈಲಿಯ 12ನೆಯ ಶತಮಾನದ ದೇಗುಲ.

ಪನ್ನೀರ ಪುಷ್ಕರಿಣಿಯಲಿ ಕಾಲು ತೋಯಿಸಿ ಮೆಟ್ಟಿಲೇರಿದಾಗ ಕಾಣಿಸಿದ್ದು ರಾಶಿ ರಾಶಿ ವೀರಗಲ್ಲು. ಕಾಲನ ಹೊಡೆತಕ್ಕೆ ಕೆಲವು ಕಂಗಾಲಾಗಿ ಮಲಗಿದ್ದರೆ ಕೆಲವೇ ಕೆಲವು ನಿಂತಿದ್ದವು. ತಮ್ಮ ಮೇಲಿನ ಅಕ್ಷರಗಳನ್ನೆಲ್ಲಾ ನುಂಗಿಕೊಂಡಿದ್ದವು ಕೆಲವು! ವೀರಗಲ್ಲಿನ ಮೇಲೂ ಕಲಾ ನೈಪುಣ್ಯ. ಚಿತ್ರ ವಿಚಿತ್ರ ಚಿತ್ರಗಳ ವಿಶಿಷ್ಟ ವೀರಗಲ್ಲುಗಳ ಸಮೂಹವೇ ಇಲ್ಲಿದೆ. ಇಲ್ಲಿ ನಡೆದಿರಬಹುದಾದ ಯುದ್ಧಗಳ ಸಣ್ಣ ಚಳಕನ್ನು ಈ ವೀರಗಲ್ಲುಗಳು ನಮಗೆ ತೋರಿಸುತ್ತವೆ. ನಮ್ಮವರ ಇತಿಹಾಸದ ದರ್ಪಣಗಳಿವು ಎಂಬುದನ್ನೂ ಅರಿಯದೆ ಸಾಯಲು ಬಿಟ್ಟಂತಿದೆ. ಕಲ್ಲಿಗೆ ಭಾಷೆ ಬಂದಿದ್ದರೆ ಹರಟಬಹುದಿತ್ತು, ಇತಿಹಾಸ ಕೆದಕಬಹುದಿತ್ತು!

ADVERTISEMENT

ಮುಂದೆ ಸಿಗುವುದೇ ದೇವಾಲಯ ಸಮುಚ್ಚಯ. ಹಾಸುಗಲ್ಲಿನ 18 ಕಂಬಗಳ ಮೇಲೆ ಅರಳಿ ನಿಂತ ನವರಂಗದ ಶೋಭೆ. ಕಲಾತ್ಮಕತೆಯಂತೂ ಅತ್ಯದ್ಭುತ. ಸ್ಫಟಿಕರೂಪಿ ಶಿವಲಿಂಗ ಲಿಪ್‍ಸ್ಟಿಕ್ ಹಾಕಿದಂತೆ ಕೆಂಪು. ಉಳಿದರ್ಧ ಕಂದು! ವರ್ಣನಾತೀತ. ನೇಪಾಳದಿಂದ ತರಿಸಲಾದ ಶಿವಲಿಂಗ ಎಂಬುದು ಅರ್ಚಕರ ಅಂಬೋಣ. ದಕ್ಷಿಣ ಭಾರತದಲ್ಲೆಲ್ಲೂ ಇಂತಹ ಅಪೂರ್ವ ಲಿಂಗವಿಲ್ಲವೆನ್ನುತ್ತಾರೆ! ಮತ್ತೆ ಮತ್ತೆ ನೋಡುವಷ್ಟು ಚೆಲುವು. ಶಿವಲಿಂಗ ಜೊತೆಗಿರುವ ಪ್ರಸನ್ನ ನಾರಾಯಣ ದೇವಾಲಯವೋ ಮಹದದ್ಭುತಗಳಲ್ಲೊಂದು. ನಾರಾಯಣನ ಮೂರುತಿ ಪೀಠ ಸೇರಿದಂತೆ ಸುಮಾರು ಏಳು ಅಡಿ ಎತ್ತರ. ಶಿವಲಿಂಗದೊಂದಿಗೆ ಪೈಪೋಟಿಗಿಳಿದಂತಿರುವ ಪ್ರಸನ್ನ ನಾರಾಯಣನ ಮೂರುತಿ. ನವರಂಗದ ಹೊರ ಭಿತ್ತಿಯಲ್ಲಿ ಅನೇಕ ಕತೆಗಳನ್ನು, ಮಿಥುನ ಶಿಲ್ಪಗಳನ್ನು ಕೆತ್ತಲಾಗಿದೆ! ಕೆತ್ತನೆಯ ನಾಜೂಕು ನಿಮ್ಮನ್ನು ಸೂರೆಗೊಳಿಸುತ್ತದೆ.

ಸರಿಯಾದ ರಕ್ಷಣೆಯಿಲ್ಲದೆ ನಿಂತಿರುವ ವೀರಗಲ್ಲುಗಳು

ದೇವಾಲಯದ ಸನಿಹದಲ್ಲೇ 12 ಅಡಿಗಳಷ್ಟು ಎತ್ತರದ ಮಣ್ಣಿನ ಗೋಡೆಗಳಿವೆ. ಯಾವುದೋ ಸಾಮಂತ ರಾಜ ಆಳ್ವಿಕೆ ಮಾಡಿರುವ ಸಾಧ್ಯತೆಗಳಿವೆ. ಕೆದಕಿದರೆ ಇತಿಹಾಸದ ಕುರುಹುಗಳು ಕಾಣ ಸಿಕ್ಕಾವು. ದೇವಾಲಯದ ಸನಿಹದ ಕಾಡು ಅಮೂಲ್ಯ ವನ ಸಂಪತ್ತಿನ ಆಗರ. 600 ವರುಷ ಹಳೆಯ ಮಾವಿನ ಮರವೊಂದು ನಾವು ಆರು ಜನ ಮುತ್ತಿಗೆ ಹಾಕಿದರೂ ಕೈ ಸಾಲದಾಯಿತು! 500 ವರುಷ ಹಳೆಯ ಬಳ್ಳಿಗಳು, ವಿಶಿಷ್ಟ ಪೊದೆಗಳು ಅನೇಕ ದಿನಗಳವರೆಗೆ ನಿಮ್ಮ ಮನಸ್ಸನ್ನು ಆವರಿಸದೇ ಬಿಡವು. 600 ಎಕರೆಯಲಿ ಹರಡಿದ ಹೊಸಗುಂದದ ದೇವಾಲಯ ನಿಶ್ಚಯವಾಗಿ ನಿಮಗೆ ಹೊಸ ಸ್ಟೋರಿ ನೀಡುವಲ್ಲಿ ಖಂಡಿತ ಸೋಲದು. ಇಲ್ಲಿನ ವನ ಸಂಪತ್ತನ್ನು ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಸರ್ವೆ ನಡೆಸಿ 540ಕ್ಕೂ ಹೆಚ್ಚು ಅಳಿವಿನಂಚಿನ ಗಿಡಗಳಿವೆಯೆಂದು ಗುರುತಿಸಿದೆ! ಅಬ್ಬಾ ಎಂದಿತು ಮನ.

ವಿಶಿಷ್ಟ ವಿನ್ಯಾಸದ ಕಾಳಿ ದೇವಾಲಯವನ್ನು ನೋಡದೇ ಬಂದರೆ ಖಂಡಿತ ಏನೋ ಒಂದನ್ನು ಕಳೆದುಕೊಂಡಂತೆ. ಕೇರಳೀಯ ಶೈಲಿಯಲ್ಲಿ ಕೆಂಪು ಕಲ್ಲಿನಲ್ಲಿ ಕಡೆದು ಕೆತ್ತಿದ್ದಾರೆ. ಅಂದವಾಗಿ ಅದಕ್ಕೆ ಮಂಗಳೂರು ಹೆಂಚು ಹೊದಿಸಲಾಗಿದೆ. ಸುತ್ತಲೂ ಸುಂದರ ಪೌಳಿಯನ್ನು ನಿರ್ಮಿಸಿದ್ದಾರೆ.

ಇತಿಹಾಸವನು ಕೆದಕಿದರೆ ಕ್ರಿ.ಶ. 9ನೆಯ ಶತಮಾನಕ್ಕೆ ನಮ್ಮನ್ನು ಒಯ್ಯುತ್ತದೆ. ಕೆಲವೇ ವರ್ಷಗಳ ಕೆಳಗೆ ಮಣ್ಣಿನಡಿಯಲ್ಲಿ ಮಲಗಿದ್ದ ದೇವಾಲಯವು ಊರಿನವರ (ನಾರಾಯಣ ಶಾಸ್ತ್ರಿ ದಂಪತಿ) ಮತ್ತು ಉಮಾ ಮಹೇಶ್ವರ ಸೇವಾ ಟ್ರಸ್ಟ್‌ ಕಾಳಜಿಯಿಂದ ಜೀರ್ಣೋದ್ಧಾರಗೊಂಡಿದೆ. ಎಲ್ಲಾ ದೇವಾಲಯಗಳನ್ನು ಮೊದಲಿನಂತೆ ನಿರ್ಮಿಸಲಾಗಿದೆ.

ಎ. ಸುಂದರಂ, ಜಿ.ವಿ. ಕಲ್ಲಾಪುರ, ಸಾಮಕ್ ಅವರ ಸಂಶೋಧನೆಯ ಪರಿಶ್ರಮ ಎದ್ದು ಕಾಣುತ್ತದೆ. ಇಲ್ಲಿನ ಶಾಸನಗಳನ್ನು ಓದಿ ಇದರ ಐತಿಹ್ಯದ ಗಂಟನ್ನು ಬಿಡಿಸಿದ್ದಾರೆ. ಉತ್ಖನನಗೊಂಡಾಗ ಶಿಲಾಯುಗದ ಆಯುಧಗಳೂ, ಗಂಗರ ಕಾಲದ ನಾಣ್ಯಗಳೂ ಸಿಕ್ಕಿವೆ ಎಂದು ಹೇಳಲಾಗುತ್ತದೆ.

ಕಲ್ಲಿನ ಕಂಬಗಳಸೊಬಗೇನ ಹೇಳಲಿ

ಪ್ರಸನ್ನ ನಾರಾಯಣಿ ದೇವಾಲಯವನ್ನು ಬಲದೇವನೆಂಬುವವನು 1242ರಲ್ಲಿ ನಿರ್ಮಿಸಿದನೆಂದು ಐತಿಹ್ಯ ಹೇಳುತ್ತದೆ. ಕ್ರಿ.ಶ. 1320ರಲ್ಲಿ ಹೊಯ್ಸಳರ ವೀರ ಬಲ್ಲಾಳ ದೇವರಸನು ಕಂಚಿ ಕಾಳಮ್ಮ ದೇವಾಲಯಕ್ಕೆ ಭೂದಾನ ನೀಡಿದ ಶಾಸನ ಪತ್ತೆಯಾಗಿದೆ. ಗಣಪತಿ, ವೀರಭದ್ರ, ಮಹಿಷ ಮರ್ದಿನಿ, ಸುಬ್ರಹ್ಮಣ್ಯ ದೇವಾಲಯ ನಿರ್ಮಿಸಿದನೆಂದು ಅಳಿಯದೇ ಉಳಿದ ಶಾಸನಗಳು ಸಾರುತ್ತವೆ.

ಇಲ್ಲಿನ ದೇವಾಲಯಗಳನ್ನು ದ್ರಾವಿಡ, ಹೊಯ್ಸಳ, ಪಲ್ಲವ, ಕೇರಳೀಯ ಶೈಲಿಗಳಲ್ಲಿ ನಿರ್ಮಿಸಲಾಗಿದೆ. ಅತ್ಯದ್ಭುತವಾದ ದೇವಾಲಯ ಸಮುಚ್ಚಯದ ಜೊತೆಗೆ 600 ಎಕರೆ ದೇವರಕಾಡು ಪರಿಸರಾಸಕ್ತರಿಗೆ, ಇತಿಹಾಸಪ್ರಿಯರಿಗೆ ಸುಗ್ರಾಸ ಭೋಜನವನ್ನು ಉಣ ಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.