ADVERTISEMENT

ಸಿಎಂ ವಾಸ್ತವ್ಯ ಹೂಡುತ್ತಿದ್ದ ‘ರಾಯಲ್‌ ಆರ್ಕಿಡ್‌’ ಹೋಟೆಲ್‌ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2019, 11:32 IST
Last Updated 4 ಏಪ್ರಿಲ್ 2019, 11:32 IST
   

ಮಂಡ್ಯ: ಜಿಲ್ಲೆಯಲ್ಲಿ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ದಾಳಿ ಮುಂದುವರಿದಿದ್ದು ಗುರುವಾರ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್‌ನಲ್ಲಿರುವ ರಾಯಲ್‌ ಆರ್ಕಿಡ್‌ ಹೋಟೆಲ್‌ ಮೇಲೆ ದಾಳಿ ನಡೆಸಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಹಾಗೂ ಮೈಸೂರಿಗೆ ಬಂದಾಗ ಇದೇ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಈಚೆಗೆ ಅಲ್ಲಿ ಮುಖ್ಯಮಂತ್ರಿಗಳು ಜೆಡಿಎಸ್‌ ಶಾಸಕರ ಸಭೆ ನಡೆಸಿದ್ದರು. ಬುಧವಾರ ರಾತ್ರಿ ನಿಖಿಲ್‌ ಕುಮಾರಸ್ವಾಮಿ ಸಹ ಇದೇ ಹೋಟೆಲ್‌ನಲ್ಲಿ ತಂಗಿದ್ದರು. ಈ ಹಿನ್ನೆಲೆಯಲ್ಲಿ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಬಂದು ಹೋಗಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯವಳಿಯನ್ನು ವಶಕ್ಕೆ ಪಡೆದರು. ಜೊತೆಗೆ ಅವರು ತಂಗಿದ್ದ ಕೊಠಡಿಗಳಲ್ಲಿ ಪರಿಶೀಲನೆ ನಡೆಸಿದರು. ಐಟಿ ಅಧಿಕಾರಿಗಳು ಒಂದು ತಿಂಗಳಿನಿಂದ ಮಂಡ್ಯದಲ್ಲೇ ಇದ್ದು ಜೆಡಿಎಸ್‌–ಕಾಂಗ್ರೆಸ್‌ ಮುಖಂಡರ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಆತ್ಮಾನಂದ ಮನೆಯಲ್ಲಿ ₹ 10 ಲಕ್ಷ ಜಪ್ತಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್‌.ಆತ್ಮಾನಂದ ಮನೆಯಲ್ಲಿ ಲೆಕ್ಕಕ್ಕೆ ಸಿಗದ ₹ 10 ಲಕ್ಷ ನಗದು ದೊರೆತಿದ್ದು ಅದನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬುಧವಾರ ದಾಳಿ ನಡೆಸಿ ತಡರಾತ್ರಿಯವರೆಗೂ ಶೋಧ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.