ನವದೆಹಲಿ (ಪಿಟಿಐ): ಕೆಲವು ರಾಜ್ಯಗಳ ವಿಧಾನಸಭೆಗೆ ಮುಂಬರುವ ಕೆಲ ತಿಂಗಳಲ್ಲಿ ಚುನಾವಣೆ ಇರುವುದರಿಂದ ಯುಪಿಎ ಅಂಗಪಕ್ಷಗಳ ಅಭ್ಯರ್ಥಿಗಳನ್ನು ಸಂಪುಟ ಪುನರ್ರಚನೆ ವೇಳೆ ಪರಿಗಣಿಸಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ವಿಧಾನಸಭೆಗೆ ಚುನಾವಣೆ ಹತ್ತಿರ ಇರುವಾಗ ಅಂಗಪಕ್ಷಗಳ ಅಭ್ಯರ್ಥಿಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಸರಿಯಲ್ಲ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಅಂಬಿಕಾ ಸೋನಿ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಫೆ.21ರಂದು ಆರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನ ಮೇ ವರೆಗೂ ನಡೆಯಲಿದೆ. ಆನಂತರ ಪೂರ್ಣ ಪ್ರಮಾಣದ ಸಂಪುಟ ಪುನರ್ರಚನೆ ನಡೆಯಲಿದೆ. ಬುಧವಾರದ ಸಂಪುಟ ಮರುರಚನೆ ಹಲವು ಸಚಿವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ.
ಸಚಿವರ ಸಾಮರ್ಥ್ಯ ಪರಿಗಣಿಸಿ ಹೊಣೆಗಾರಿಕೆ ನೀಡಿರುವುದರಿಂದ ಆಡಳಿತದಲ್ಲಿ ಹೊಸ ಚಿಂತನೆ ತರಲು ಇದು ನೆರವಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಮುಂದಿನ ಕೆಲ ತಿಂಗಳುಗಳಲ್ಲಿ ಚುನಾವಣೆ ನಡೆಯಬೇಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.