ನವದೆಹಲಿ (ಪಿಟಿಐ): ಸಂಸತ್ ಭವನದ ಮೇಲೆ ದಾಳಿ ಮಾಡಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಅಫ್ಜಲ್ ಗುರು ಮತ್ತು ಇತರ ಆರು ಮಂದಿ ಸಲ್ಲಿಸಿರುವ ಕ್ಷಮಾದಾನ ಅರ್ಜಿಯ ಕಡತಗಳನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ನಂತರ ಗೃಹ ಸಚಿವ ಸುಶೀಲ್ಕುಮಾರ್ ಶಿಂಧೆ ಪರಿಶೀಲಿಸಲಿದ್ದಾರೆ.
ಅಫ್ಜಲ್ ಗುರು ಅಲ್ಲದೆ ಇತರ ಆರು ಮಂದಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಕಡತಗಳನ್ನು ಸಂಸತ್ ಅಧಿವೇಶನದ ನಂತರ ಪರಿಶೀಲಿಸುವುದಾಗಿ ಶಿಂಧೆ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಅಫ್ಜಲ್ ಗುರುವಿನ ಅರ್ಜಿಯನ್ನು ಪುನರ್ ಪರಿಶೀಲನೆ ನಡೆಸುವಂತೆ ಸೂಚಿಸಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಕಡತವನ್ನು ಗೃಹ ಇಲಾಖೆಗೆ ವಾಪಸ್ ಕಳುಹಿಸಿದ್ದಾರೆ.
ಉತ್ತಮ ಗುಣಮಟ್ಟದ ತರಬೇತಿ: ಗಡಿ ಭದ್ರತಾ ಪಡೆಯ (ಬಿಎಸ್ಎಫ್) 47ನೇ ಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಶಿಂಧೆ ಅವರು, ಬಿಎಸ್ಎಫ್ನಲ್ಲಿ ನೀಡಲಾಗುತ್ತಿರುವ ಉತ್ತಮ ಗುಣಮಟ್ಟದ ತರಬೇತಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರಲ್ಲದೆ ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಮತ್ತು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅಗತ್ಯವಾದ ನೆರವು ನೀಡುವ ಭರವಸೆ ನೀಡಿದರು.
ಬಿಎಸ್ಎಫ್ ಯೋಧರು ತಮ್ಮ ಕುಟುಂಬದಿಂದ ದೂರವಿದ್ದುಕೊಂಡು ಅತಿ ಕ್ಲಿಷ್ಟಕರ ಸನ್ನಿವೇಶದಲ್ಲಿ ಕೆಲಸ ಮಾಡುತ್ತಿರುವ ವಿಚಾರ ತಮಗೆ ತಿಳಿದಿದ್ದು, ಎಲ್ಲಾ ಸಂದರ್ಭಗಳಲ್ಲೂ ಉತ್ತಮವಾಗಿಯೇ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.