ಅಮೇಠಿ:ಬಿಜೆಪಿ ಕಾರ್ಯಕರ್ತ ಸುರೇಂದ್ರ ಸಿಂಗ್ ಕೊಲೆ ಪ್ರಕರಣದ ಐದನೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಪರಿಣಾಮ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಮಂದಿಯನ್ನು ಬಂಧಿಸಿರುವ ಪೊಲೀಸರು ಐದನೆ ಆರೋಪಿಗಾಗಿ ಶೋಧ ನಡೆಸಿದ್ದರು. ಆರೋಪಿ ಇರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಆತ ಅಡಗಿದ್ದ ಸ್ಥಳದ ಮೇಲೆ ದಾಳಿ ನಡೆಸಿದರು. ಆ ಸಮಯದಲ್ಲಿ ಆತ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಎನ್ನಲಾಗಿದೆ. ಕೂಡಲೆ ಆತನ ಕಾಲಿಗೆ ಗುಂಡು ಹಾರಿಸಲಾಯಿತು. ತೀವ್ರ ಗಾಯಗೊಂಡ ಆತ ಕುಸಿದ ಪರಿಣಾಮ ಆತನನ್ನ ವಶಕ್ಕೆ ಪಡೆದ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಆತ ಚಿಕಿತ್ಸೆಪಡೆಯುತ್ತಿದ್ದು, ಚೇತರಿಸಿಕೊಂಡ ಬಳಿಕ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಇನ್ಸ್ಪೆಕ್ಟರ್ ಕೂಡ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೊಲೆ ಪ್ರಕರಣದಲ್ಲಿ ಈತನೇ ಐದನೆ ಆರೋಪಿ ಹಾಗೂ ಕಡೆಯ ಆರೋಪಿಯನ್ನು ಈಗ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಕಾಲಿಗೆ ಗಾಯಗಳಾಗಿವೆ. ಚಿಕಿತ್ಸೆ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಮೇಠಿ ಜಿಲ್ಲಾ ಎಸ್ಪಿ ರಾಜೇಶ್ ಕುಮಾರ್ ಮಾಧ್ಯಮದವರಿಗೆ ತಿಳಸಿದ್ದಾರೆ.
ಲೋಕಸಭಾ ಚುನಾವಣೆ ಸಮಯದಲ್ಲಿ ಆರಂಭವಾದ ದ್ವೇಷದಿಂದಾಗಿ ಐದು ಮಂದಿ ಆರೋಪಿಗಳು ಸುರೇಂದ್ರ ಸಿಂಗ್ ನನ್ನು ಕೊಲೆ ಮಾಡಿದ್ದರು. ಸಚಿವೆ ಸ್ಮೃತಿ ಇರಾನಿಯ ಕಟ್ಟಾ ಬೆಂಬಲಿಗನಾಗಿದ್ದ ಸುರೇಂದ್ರ ಸಿಂಗ್ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ಸಿಂಗ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಸ್ಮೃತಿ ಇರಾನಿ ಅವರು ಆತನ ಮನೆಗೆ ಹೋಗಿ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.