ADVERTISEMENT

ಅವಿರೋಧ ಆಯ್ಕೆ ಸಂಭವ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2012, 18:30 IST
Last Updated 17 ಆಗಸ್ಟ್ 2012, 18:30 IST

ನವದೆಹಲಿ (ಪಿಟಿಐ): ಕೆ. ರೆಹಮಾನ ಖಾನ್ ಅವರ ನಿವೃತ್ತಿಯ ನಂತರ ತೆರವಾಗಿರುವ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಜೆ. ಕುರಿಯನ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಂಭವ ಇದೆ.

ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಅರುಣ್ ಜೈಟ್ಲಿ ಕುರಿಯನ್ ಆಯ್ಕೆಗೆ ಸಹಮತ ವ್ಯಕ್ತಪಡಿಸಿರುವ ಕಾರಣ ಅವರ ಆಯ್ಕೆಯ ಹಾದಿ ಸುಗಮವಾದಂತಾಗಿದೆ. ಈ ತಿಂಗಳ 21ರಂದು ನಡೆಯುವ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು.

ಆಡಳಿತಾರೂಢ ಯುಪಿಎ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಪಕ್ಷಗಳು ಕುರಿಯನ್ ಪರ ಇರುವುದರಿಂದಾಗಿ ರಾಜ್ಯಸಭೆಯ ಉಪಸಭಾಪತಿ ಸ್ಥಾನದ ಅಭ್ಯರ್ಥಿಯೊಬ್ಬರು ಇದೇ ಮೊದಲ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುವಂತಾಗಿದೆ.

`ಕುರಿಯನ್ ಎಲ್ಲ ಪಕ್ಷಗಳೊಂದಿಗೆ ಸೌಹಾರ್ದ ಸಂಬಂಧ ಹೊಂದಿರುವ ಒಳ್ಳೆಯ ವ್ಯಕ್ತಿಯಾಗಿರುವುದರಿಂದ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ನಮ್ಮ ಅಭ್ಯರ್ಥಿ ಬಹುತೇಕ ಸ್ಪರ್ಧೆಗೆ ಇಳಿಯಲಾರರು~ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದರು.

ಸಂಖ್ಯಾಬಲ ಇಲ್ಲದ ಪರಿಣಾಮ ಎಡ ಪಕ್ಷಗಳು ಹಾಗೂ ಇತರರು ಸಹ ಈ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ನಿಲ್ಲಿಸುವಲ್ಲಿ ಆಸಕ್ತಿ ತೋರಿಸಲಿಲ್ಲ ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಕಾಂಗ್ರೆಸ್ ಮಿತ್ರ ಪಕ್ಷ ಎನ್‌ಸಿಪಿ ನಾಯಕ ತಾರೀಕ್ ಅನ್ವರ್ ಅವರ ಹೆಸರೂ ಈ ಸ್ಥಾನಕ್ಕೆ ಕೇಳಿಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.