ನವದೆಹಲಿ: ಎರಡೂ ರಾಜ್ಯಕ್ಕೆ ಸಲ್ಲಬೇಕಾದ ನೀರಿನ ಪ್ರಮಾಣದ ಕುರಿತು ಸಭೆಯಲ್ಲಿ ಮಾಹಿತಿ ಕಲೆಹಾಕಿ ಚರ್ಚೆ ನಡೆಸಿದ ಬಳಿಕ ತಮಿಳುನಾಡಿಗೆ 10 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ ನೀಡಲಾಗಿದೆ. ಆದೇಶ ಸಮಾಧಾನ ಆಗದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಕಾವೇರಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶಶಿಶೇಖರ್ ತಿಳಿಸಿದರು.
ಶ್ರಮಶಕ್ತಿ ಭವನದಲ್ಲಿ ಸೋಮವಾರ ನಡೆದ ಕಾವೇರಿ ಮೇಲುಸ್ತುವಾರಿ ಸಮಿತಿಯ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ದಿನ 3 ಸಾವಿರ ಕ್ಯೂಸೆಕ್ನಂತೆ ಒಟ್ಟು 30 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಸಮಿತಿ ಆದೇಶಿಸಿದೆ. ಸೆಪ್ಟೆಂಬರ್ 21ರಿಂದ 30ರವರೆಗೆ ನೀರು ಹರಿಸಲು ಸಮಿತಿ ಆದೇಶ ನೀಡಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಎರಡೂ ರಾಜ್ಯಕ್ಕೆ ಸಲ್ಲಬೇಕಾದ ನೀರಿನ ಪ್ರಮಾಣದ ಕುರಿತು ಮಾಹಿತಿ ಕಲೆಹಾಕಲಾಗಿದೆ. ಕಳೆದ 15 ದಿನಗಳಲ್ಲಿ ಜಲಾಶಯಗಳ ಒಳ ಹರಿವು, ಹೊರ ಹರಿವಿನ ಮಾಹಿತಿ ಪಡೆದು ಚರ್ಚಿಸಲಾಗಿದೆ. ಪ್ರತಿ ವರ್ಷ ನೀರಿನ ಕೊರತೆ ಸಮಸ್ಯೆ ಎದುರಾಗುತ್ತದೆ. ಎಲ್ಲ ಅಂಶ ಪರಿಗಣಿಸಿ ನೀರು ಬಿಡಲು ಆದೇಶಿಸಲಾಗಿದೆ ಎಂದು ಅವರು ಹೇಳಿದರು.
ಈ ನಿರ್ಧಾರದಿಂದ ಸಮಾಧಾನ ಆಗದಿದ್ದರೆ ಸುಪ್ರೀಂ ಕೋರ್ಟ್ಗೆ ಹೋಗಬಹುದು. ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲು ಎರಡೂ ರಾಜ್ಯ ಸರ್ಕಾರಗಳಿಗೆ ಅವಕಾಶವಿದೆ ಎಂದು ಅವರು ತಿಳಿಸಿದರು.
ಸಧ್ಯದ ಪರಿಸ್ಥಿತಿಯಲ್ಲಿ ನೀರು ಬೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸಭೆಗೆ ತಿಳಿಸಿತು. ಆದರೆ, ಟ್ರ್ಯೂಬಿನಲ್ ಆದೇಶದಂತೆ ನೀರುಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.