ADVERTISEMENT

ಉಪ ರಾಷ್ಟ್ರಪತಿ ಚುನಾವಣೆ : ಶೀಘ್ರ ಬಿಜೆಪಿ ಅಭ್ಯರ್ಥಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2012, 19:30 IST
Last Updated 14 ಜುಲೈ 2012, 19:30 IST

ನವದೆಹಲಿ (ಪಿಟಿಐ): ಮುಂಬರುವ ಉಪ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಯುಪಿಎ ತನ್ನ ಅಭ್ಯರ್ಥಿಯನ್ನಾಗಿ ಹಮೀದ್ ಅನ್ಸಾರಿ ಅವರನ್ನು ಘೋಷಣೆ ಮಾಡುತ್ತಿದ್ದಂತೆಯೇ ಬಿಜೆಪಿ ಸಹ ಕಣಕ್ಕಿಳಿಯಲು ನಿರ್ಧರಿಸಿದೆ.

ಯುಪಿಎ ಅನ್ಸಾರಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸುತ್ತಿದ್ದಂತೆಯೇ, ಶನಿವಾರ ಸಂಜೆ ಇಲ್ಲಿ ಸಭೆ ಸೇರಿದ ಬಿಜೆಪಿ ಪ್ರಮುಖರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಇದೇ16ರಂದು ಎನ್‌ಡಿಎ ಸಭೆ ನಡೆಯಲಿದ್ದು ಆ ನಂತರವಷ್ಟೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

2007ರಲ್ಲಿ ಅನ್ಸಾರಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ನಜ್ಮಾ ಹೆಪ್ತುಲ್ಲಾ ಇಲ್ಲವೆ ಜೆಡಿ(ಯು) ಅಧ್ಯಕ್ಷ ಶರದ್ ಯಾದವ್ ಅವರಲ್ಲಿ ಒಬ್ಬರನ್ನು ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ತೃಣಮೂಲ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಗೋಪಾಲಕೃಷ್ಣ ಗಾಂಧಿ ಅಥವಾ ಕೃಷ್ಣ ಬೋಸ್ ಅವರನ್ನು ಆಯ್ಕೆಮಾಡಲಾಗುತ್ತಿದೆ ಎಂಬ ವದಂತಿಗಳು ಕೇಳಿಬಂದಿದ್ದರೂ ಪಕ್ಷದ ಅಧ್ಯಕ್ಷೆ ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಲ್ಲಿ ಎನ್‌ಡಿಎ ತನ್ನ ಅಭ್ಯರ್ಥಿಯನ್ನು ನಿಲ್ಲಿಸುವುದು ಖಚಿತ ಎನ್ನಲಾಗುತ್ತಿದೆ.

ಗಡ್ಕರಿ, ಅಡ್ವಾಣಿಗೆ ಪ್ರಧಾನಿ ಮನವಿ: ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ ಬಿಜೆಪಿ ನಾಯಕರಾದ ನಿತಿನ್ ಗಡ್ಕರಿ, ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್ ಹಾಗೂ ಅರುಣ್ ಜೇಟ್ಲಿ ಅವರನ್ನು ಸಂಪರ್ಕಿಸಿ ಉಪರಾಷ್ಟ್ರಪತಿ ಸ್ಥಾನಕ್ಕೆ ಹಮೀದ್ ಅನ್ಸಾರಿ ಅವರನ್ನು ಬೆಂಬಲಿಸುವಂತೆ ಕೋರಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.